ತೀರ್ಥಹಳ್ಳಿ : ಸಾರ್ವಜನಿಕ ಕೆಲಸಗಾರರಿಂದ ವಿಪರೀತ ಲಂಚದ ಬೇಡಿಕೆ, ಹದಗೆಟ್ಟ ಆಡಳಿತ ವ್ಯವಸ್ಥೆ ಮತ್ತು ಸ್ಥಳೀಯ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ಅವಕಾಶ ಕೋರಿದ್ದ ತೀರ್ಥಹಳ್ಳಿ ತಾಲ್ಲೂಕು ದಲಿತ ಮುಖಂಡ ಇಬ್ಬರನ್ನು ಇಂದು ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಪ್ರಗತಿ ಪರಿಶೀಲನೆಗೆಂದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊಪ್ಪ ಮತ್ತು ತೀರ್ಥಹಳ್ಳಿಗೆ ಆಗಮಿಸುವ ಕಾರ್ಯಕ್ರಮವಿತ್ತು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿ, ಸ್ಥಳೀಯ ಹದಗೆಟ್ಟ ಆಡಳಿತ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ಶಿವಮೊಗ್ಗ ಜಿಲ್ಲಾ ಮಟ್ಟದ ಮುಖಂಡರು ಸಿದ್ಧತೆ ನಡೆಸಿಕೊಂಡಿದ್ದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಂದ ಸೂಕ್ತ ಪರಿಹಾರ ಮತ್ತು ಬೇಡಿಕೆಗಳ ಈಡೇರಿಸಲು ಮುಂದಾಗದಿದ್ದರೆ ಅಲ್ಲೇ ಕಪ್ಪು ಬಟ್ಟೆ ಪ್ರದರ್ಶನ ಮಾಡುವುದಾಗಿಯೂ ನವೆಂಬರ್ 26 ರ ಶನಿವಾರ ಪತ್ರಿಕಾ ಹೇಳಿಕೆ ನೀಡಿದ್ದರು. ಈ ಸಂಬಂಧ ನವೆಂಬರ್ 27 ರ ಭಾನುವಾರ ಬೆಳಿಗ್ಗೆಯೇ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಕೀಗಡಿ ಕೃಷ್ಣಮೂರ್ತಿ ಮತ್ತು ಹಾರೇಗೊಳಿಗೆ ವಿಶ್ವನಾಥ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.