ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿಯ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ರಾಣಿ ಅಬ್ಬಕ್ಕನ ಕುರಿತಾಗಿ ‘ಮಣೇಲ್ ದ ಪೆರ್ಮೆ ರಾಣಿ ಅಬ್ಬಕ್ಕ’ ಎಂಬ ವಿಚಾರ ಕೂಟವನ್ನು ಸ್ಥಳೀಯ ರಾಣಿ ಅಬ್ಬಕ್ಕ ಚಾವಡಿಯ ಸಹಭಾಗಿತ್ವದಲ್ಲಿ ಡಿ.14ರಂದು ಬೆಳಿಗ್ಗೆ 10.00 ಗಂಟೆಗೆ ಆಯೋಜಿಸಲಾಗಿದೆ ಇಂದು ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಣಿ ಅಬ್ಬಕ್ಕನ ಅರಮನೆ ಇದ್ದಂತಹ ಮಣೇಲ್ ಗ್ರಾಮದಲ್ಲಿ ವಿದೇಶಿ ಪ್ರವಾಸಿ ಪಿಯಾತ್ರೋ ದಲ್ಲಾವೆಲ್ಲೆ ಅಬ್ಬಕ್ಕ ರಾಣಿಯನ್ನು ಭೇಟಿ ಮಾಡಿರುವ ಬಗ್ಗೆ ಆತನ ಪ್ರವಾಸ ಕಥನದಲ್ಲಿ ವಿವರವಾಗಿ ಉಲ್ಲೇಖಿಸಿದ್ದಾನೆ. ಈ ಗ್ರಾಮದಲ್ಲಿ ಅಬ್ಬಕ್ಕ ಆರಾಧನೆ ಮಾಡುತ್ತಿದ್ದ ಶ್ರೀ ಅನಂತನಾಥ ಸ್ವಾಮಿ ಬಸದಿ ಇದ್ದು, ಪ್ರಸ್ತುತ ಪ್ರತಿನಿತ್ಯ ಇಲ್ಲಿ ಪೂಜೆ ನಡೆಯುತ್ತಿದೆ. ಅಬ್ಬಕ್ಕನ ಬಗ್ಗೆ ಸ್ಥಳೀಯ ಯುವ ಜನಾಂಗಕ್ಕೆ ಅಭಿಮಾನ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಸಾಂಸ್ಕ್ರತಿಕ ನಡಿಗೆ :
ವಿಚಾರಗೋಷ್ಠಿ ಉದ್ಘಾಟನೆಗೆ ಮೊದಲು ಬೆಳಿಗ್ಗೆ 9.30 ಕ್ಕೆ ಶ್ರೀ ಅನಂತ ಸ್ವಾಮಿ ಬಸದಿಯಿಂದ ವಿಚಾರಗೋಷ್ಠಿ ನಡೆಯುವ ಮಳಲಿ ಸರಕಾರಿ ಪ್ರಾಥಮಿಕ ಶಾಲೆಯ ಆವರಣ ತನಕ ಸಾಂಸ್ಕ್ರತಿಕ ನಡಿಗೆ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪಗೌಡ ಉದ್ಘಾಟಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು.
ವಿಚಾರಗೋಷ್ಠಿ :
ಅಬ್ಬಕ್ಕನ ಕುರಿತಾಗಿ ನಡೆಯುವ ಪ್ರಥಮ ಗೋಷ್ಠಿಯಲ್ಲಿ ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ ‘ಅಬ್ಬಕ್ಕ ಚಾರಿತ್ರಿಕ ಅವಲೋಕನ’ ವಿಷಯದ ಬಗ್ಗೆ ಹಾಗೂ ಎರಡನೇ ಗೋಷ್ಠಿಯಲ್ಲಿ ಇತಿಹಾಸ ತಜ್ಞರು ಹಾಗೂ ನಿವೃತ್ತ ಉಪನ್ಯಾಸಕ ಡಾ.ಪುಂಡಿಕಾಯಿ ಗಣಪಯ್ಯ ಭಟ್ ‘ಮಣೇಲಿನಲ್ಲಿ ಪ್ರವಾಸಿ ಕಂಡ ಅಬ್ಬಕ್ಕ’ ವಿಷಯದ ಬಗ್ಗೆ ಉಪನ್ಯಾಸ ನೀಡುವರು.
ಈ ವಿಚಾರಗೋಷ್ಠಿಯಲ್ಲಿ ಮಂಡಿಸಲ್ಪಡುವ ಚಾರಿತ್ರಿಕ ವಿಷಯಗಳ ಆಶಯದಂತೆ ಮುಂದಿನ ದಿನಗಳಲ್ಲಿ ಅಬ್ಬಕ್ಕರಾಣಿಯ ಚಿತ್ರವನ್ನು ಸ್ಥಳೀಯ ಶಾಲೆಯ ಹಾಗೂ ಕಟ್ಟೆಮಾರು ಮನೆಯ ಆವರಣಗೋಡೆಯಲ್ಲಿ ಜಿಲ್ಲೆಯ ಹಿರಿಯ ಕಲಾವಿದರು ಚಿತ್ರಿಸುವ ಯೋಜನೆಯನ್ನು ಹೊಂದಲಾಗಿದೆ.
ಕಾರ್ಯಕ್ರಮದಲ್ಲಿ ಹಿರಿಯ ಚಿತ್ರ ಕಲಾವಿದ ಗಣೇಶ್ ಸೋಮಯಾಜಿ, ಗಂಜಿಮಠ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಎಮ್ , ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶಶಿಧರ್ ಜಿ ಎಸ್, ಮಂಗಳೂರು ದಕ್ಷಿಣದ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಈಶ್ವರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಗಂಜಿಮಠ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷ ನೋಣಯ್ಯ ಕೋಟ್ಯಾನ್, ಪ್ರಶಾಂತ್ ಕಟ್ಟೆಮಾರ್, ಮಳಲಿ ಪ್ರಾಥಮಿಕ ಶಾಲಾ ಅಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಗುಣಪಾಲ ಮೇಂಡ, ಪ್ರೌಢಶಾಲಾ ಅಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸೀತಾರಾಮ ಪೂಜಾರಿ , ಉಳಿಪಾಡಿ ಗುತ್ತು ಸುಭಾಷ್ ಚಂದ್ರ ನಾಯ್ಕ್, ಉದಯ ಆಳ್ವ , ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಭಾಗವಹಿಸುವರು. ಪ್ರತಿಕಾಗೋಷ್ಠಿಯಲ್ಲಿ ಅಕಾಡೆಮಿ ರಿಜಿಸ್ಟ್ರಾರ್ಪೂ ರ್ಣಿಮಾ, ಅಕಾಡೆಮಿ ಸದಸ್ಯರಾದ ಬೂಬ ಪೂಜಾರಿ ಮಳಲಿ, ಅಕ್ಷಯ ಆರ್. ಶೆಟ್ಟಿ, ಸ್ಥಳೀಯರು ಹಾಗೂ ಪ್ರಶಾಂತ ಪ್ರಾಂಶುಪಾಲ ಪ್ರೊ. ಅಕ್ಷಯ ಕುಮಾರ್ ಮಳಲಿ , ಸ್ಥಳೀಯರಾದ ಪುರಂದರ ಕುಲಾಲ್ ಉಪಸ್ಥಿತರಿದ್ದರು.

