ಶಿಕ್ಷಣ ಸಚಿವ ಪ್ರಧಾನ್​, ಗೃಹಸಚಿವ ಶಾ ರಾಜೀನಾಮೆಗೆ ಆಗ್ರಹ

0
1

ಉಡುಪಿ: ಕಳೆದ 12 ವರ್ಷಗಳಲ್ಲಿ ನೂರಾರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಕೇಂದ್ರ ಸರ್ಕಾರದಿಂದ ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಿಕ್ಷಣ ಸಚಿವ ಧಮೇಂರ್ದ್ರ ಪ್ರಧಾನ್​ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಅದೇ ರೀತಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್​ ದೌರ್ಜನ್ಯ ಹೊಣೆಹೊತ್ತು ಅಮಿತ್​ ಶಾ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್​ ಸದಸ್ಯ ಮಂಜುನಾಥ್​ ಭಂಡಾರಿ ಆಗ್ರಹಿಸಿದರು.

ಬ್ರಹ್ಮಗಿರಿಯ ಕಾಂಗ್ರೆಸ್​ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನ್ಯಾಯ ಕೇಳಲು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಸಮವಸ್ತ್ರ ರಹಿತರಾಗಿ ಪೊಲೀಸರ ಸೋಗಿನಲ್ಲಿ ಬಂದು ಲಾಠಿಚಾರ್ಜ್​ ನಡೆಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ದೂರಿದರು.

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಹಾಗೂ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ರ್ಖಗೆ ಅವರನ್ನು ಬಂಧಿಸುವ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಎಸ್​ ಐ ಆರ್​ಗೆ ಕಾಂಗ್ರೆಸ್​ ಸಂಪೂರ್ಣ ಬೆಂಬಲ ನೀಡಲಿದೆ. ಆದರೆ ಪಶ್ಚಿಮ ಬಂಗಾಲದಲ್ಲಿ ಮಾಡಿದಂತೆ ಕಾರ್ನಾಟಕದಲ್ಲಿ ಸಂಚು ಮಾಡಲು ಕೇಂದ್ರ ಸರ್ಕಾರಕ್ಕೆ ಬಿಡುವುದಿಲ್ಲ. ಮತದಾರರರು ಯಾವುದೇ ಮತದಾನದ ಹಕ್ಕಿನಿಂದ ಹೊರಗುಳಿಯದಂತೆ ಕ್ರಮವಹಿಸಲಾಗುವುದು ಎಂದರು.

ಜಿಲ್ಲಾಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು, ಮಹಿಳಾ ಕಾಂಗ್ರೆಸ್​ ಅಧ್ಯಕ್ಷ ಜ್ಯೋತಿ ಹೆಬ್ಬಾರ್​, ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ರಮೇಶ್​ ಕಾಂಚನ್​, ದಿನೇಶ್​ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ್​ ಶೆಟ್ಟಿ, ಪ್ರಸಾದ್​ ರಾಜ್​ ಕಾಂಚನ್​, ಹರೀಶ್​ ಕಿಣಿ ಮೊದಲಾದವರು ಉಪಸ್ಥಿತರಿದ್ದರು.