ಉಡುಪಿ : ಉಡುಪಿ ನಗರದ ಸಂತೆಕಟ್ಟೆ ಪ್ರದೇಶದಲ್ಲಿ ಚರಂಡಿಗಳ ಮೇಲಿನ ಸ್ಲ್ಯಾಬ್ಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದಾರೆ.

ಸಂತೆಕಟ್ಟೆ ಸುತ್ತಮುತ್ತಲಿನ ಚರಂಡಿಗಳಲ್ಲಿ ಕಸ ತುಂಬಿ ತುಳುಕುತ್ತಿದ್ದು, ಮಳೆ ನೀರು ಸರಾಗವಾಗಿ ಹರಿಯದೆ ರಸ್ತೆಯ ಮೇಲೆಯೇ ಹರಿಯುತ್ತಿದೆ. ಹಲವೆಡೆ ಚರಂಡಿ ಮೇಲಿನ ಸ್ಲ್ಯಾಬ್ಗಳು ಕುಸಿದು ಹೋಗಿರುವುದರಿಂದ ಪಾದಚಾರಿಗಳು, ವಾಹನ ಸವಾರರು ಮತ್ತು ಶಾಲಾ ಮಕ್ಕಳು ಭಯದ ವಾತಾವರಣದಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಶಾಲೆಗಳು ಆರಂಭವಾಗಲಿದ್ದು, ಸಾವಿರಾರು ವಿದ್ಯಾರ್ಥಿಗಳು ಇದೇ ಮಾರ್ಗದಲ್ಲಿ ಸಂಚರಿಸಬೇಕಿದೆ. ಮುಂಗಾರು ಮಳೆಯೂ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಉಡುಪಿ ಜಿಲ್ಲಾಡಳಿತ ಹಾಗೂ ಉಡುಪಿ ನಗರಸಭೆ ಶೀಘ್ರ ಕ್ರಮ ಕೈಗೊಂಡು ಹಾನಿಗೊಳಗಾದ ಸ್ಲ್ಯಾಬ್ಗಳನ್ನು ಬದಲಾಯಿಸಿ, ಚರಂಡಿ ಸ್ವಚ್ಛತೆ ನಡೆಸಿ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಸಾಮಾಜಿಕ ಹೋರಾಟಗಾರರಾದ ಸತೀಶ್ ಪೂಜಾರಿ ಕೀಳಂಜೆ, ಚಂದ್ರು ಸಂತೆಕಟ್ಟೆ, ವಿವೇಕ್ ಸಂತೆಕಟ್ಟೆ ಹಾಗೂ ಅರುಣ್ ಮಾಯಡಿ ಒತ್ತಾಯಿಸಿದ್ದಾರೆ.

