ಮಂಗಳೂರು : ನಿಷೇಧಿತ ಮಾದಕವಸ್ತು ಎಂಡಿಎಂಎಯನ್ನು ಕುಳಾಯಿ ಗುಡ್ಡೆ ಪರಿಸರದ ಮನೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಆರೋಪಿ ಹೊಸಬೆಟ್ಟು ಕುಳಾಯಿಯ ಅಣ್ಣಪ್ಪ ಸ್ವಾಮಿ ಯಾನೆ ಮನು (26) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಗುರುವಾರ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 1,50,000 ರೂ.ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ 2,10,500 ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಅಣ್ಣಪ್ಪ ಸ್ವಾಮಿ ಯಾನೆ ಮನು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್ಡಿಪಿಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ಎಸೆದಿರುವ ಪ್ರಕರಣ ಮತ್ತು ಉಳ್ಳಾಲ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.

