ಮಂಗಳೂರು: ಲೋಕಾಯುಕ್ತ ಅಧಿಕಾರಿಯೆಂದು ನಂಬಿಸಿ ವಾಟ್ಸಾಪ್ ಮೂಲಕ ಹಣ ವಸೂಲಿಗೆ ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತರ ಪತ್ರಿಕಾ ಪ್ರಕಟಣೆ ಪ್ರಕಾರ, ಧನಂಜಯ ರೆಡ್ಡಿ ತೋಟ (31) ಎಂಬಾತ ಲೋಕಾಯುಕ್ತ ಅಧಿಕಾರಿಯ ಸೋಗಿನಲ್ಲಿ ಪಂಚಾಯತ್ ಅಧಿಕಾರಿ ಪುರುಷೋತ್ತಮ್ ಅವರಿಗೆ ಕರೆ ಮಾಡಿದ್ದಾನೆ. ಆಪಾದಿತ ಭ್ರಷ್ಟಾಚಾರ ಪ್ರಕರಣವನ್ನು ಪರಿಹರಿಸಲು ಹಣ ನೀಡುವಂತೆ ಬೇಡಿಕೆಯಿಟ್ಟಿದ್ದಾನೆ.
ಈ ಬಗ್ಗೆ ಅನುಮಾನಗೊಂಡ ಪುರುಷೋತ್ತಮ್ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕರೆ ಮಾಡಿದ್ದನ್ನು ಪತ್ತೆಹಚ್ಚಿದ ಪೊಲೀಸರು, ಆಂಧ್ರ ಪ್ರದೇಶಕ್ಕೆ ತೆರಳಿ ಅಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಲೋಕಾಯುಕ್ತ ಸಂಸ್ಥೆಯೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಕಾನೂನು ಕ್ರಮ ಕೈಗೊಳ್ಳುವುದಾಗಿ ಹೆದರಿಸಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿ ಧನಂಜಯ ರೆಡ್ಡಿ ತೋಟನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.