ಮೂಡುಬಿದಿರೆ: ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಪಲ್ಟಿಯಾಗುವ ವೇಳೆ ಸ್ಕೂಟರ್ಗೆ ಡಿಕ್ಕಿ ಹೊಡೆದು, ಸ್ಕೂಟರ್ನಲ್ಲಿದ್ದ ಮಹಿಳಾ ಸಹಸವಾರೆ ಮೃತಪಟ್ಟಿದ್ದಾರೆ.
ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ ಬನ್ನಡ್ಕದ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದೇ ವೇಳೆ ರಸ್ತೆಬದಿಯಲ್ಲಿ ಸಾಗುತ್ತಿದ್ದ ಸ್ಕೂಟರ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ.
ಸ್ಕೂಟರ್ನಲ್ಲಿ ತಮ್ಮ ಸಂಬಂಧಿಕರೊಂದಿಗೆ ಸಹಸವಾರೆಯಾಗಿದ್ದ ಪಡುಮಾರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡುಮಾರ್ನಾಡು ಗ್ರಾಮದ ಶೇಡಿ ಪಲ್ಲ ನಿವಾಸಿ ಗೀತಾ(54) ಅವರು ತಲೆ ಹಾಗೂ ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗೀತಾ ಮುಂಬೈಯಲ್ಲಿ ನೆಲೆಸಿದ್ದು, ರಜೆಯಲ್ಲಿ ಊರಿಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸ್ಕೂಟಿ ಸವಾರನನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿದ್ದ ಹಲವು ಪ್ರಯಾಣಿಕರೂ ಗಾಯಗೊಂಡಿದ್ದರು.

