ಬೆಳ್ತಂಗಡಿ : ಭಾರಿ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ಗಡಾಯಿಕಲ್ಲು ಚಾರಣಕ್ಕೆ ಜಿಲ್ಲಾಡಳಿತ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಜೂನ್ 14ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಮಳೆಗಾಲದ ಕಾರಣ ಚಾರಣ ಮಾರ್ಗಗಳು ಜಾರುವಂತಾಗಿದ್ದು, ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಕೆಲವೆಡೆ ಗಾಳಿ ಹಾಗೂ ದಟ್ಟ ಮಂಜು ಆವರಿಸಿರುವುದರಿಂದ ಗಡಾಯಿಕಲ್ಲು ಪ್ರದೇಶದಲ್ಲಿ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.
ಜೂನ್ 7ರಂದು ಗಡಾಯಿಕಲ್ಲು ವೀಕ್ಷಣಾ ಸ್ಥಳದಿಂದ ಸುಮಾರು 2,000 ಅಡಿ ಆಳದ ಕಂದಕಕ್ಕೆ ಬಿದ್ದು ಪ್ರವಾಸಿಗರೊಬ್ಬರು ಮೃತಪಟ್ಟಿದ್ದ ಘಟನೆ ಈ ನಿರ್ಧಾರಕ್ಕೆ ಪ್ರಮುಖ ಕಾರಣವಾಗಿದೆ. ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಜಿಲ್ಲಾಡಳಿತ ಚಾರಣ ಚಟುವಟಿಕೆಗಳಿಗೆ ಸಂಪೂರ್ಣ ನಿರ್ಬಂಧ ಹೇರಿದೆ.
ಪರಿಸ್ಥಿತಿ ಸುಧಾರಿಸುವವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರು ಗಡಾಯಿಕಲ್ಲು ಪ್ರದೇಶಕ್ಕೆ ಭೇಟಿ ನೀಡದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

