ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ 24 ಗಂಟೆಯೊಳಗೆ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿ ಚಿನ್ನದ ಸರವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸೆ. 26 ರಂದು ರಾತ್ರಿ 8:50ರ ಸುಮಾರಿಗೆ ದೇವಸ್ಥಾನಕ್ಕೆ ಬಂದಿದ್ದ ದೇವಿಪ್ರಿಯಾ ಎಂಬ ಭಕ್ತಿಯ ಬ್ಯಾಗ್ನ ಜಿಪ್ ತೆರೆಯಲಾಗಿದ್ದು ಅದರಲ್ಲಿ ಇಟ್ಟುಕೊಂಡಿದ್ದ ಸುಮಾರು 3 ಪವನ್ ಹವಳದ ಚಿನ್ನದ ಸರವನ್ನು ಯಾರೋ ಕದ್ದಿದ್ದರು. ಇದರ ಮೌಲ್ಯ ಅಂದಾಜು ರೂ.2.5 ಲಕ್ಷ ಎಂದು ಅವರು ನೀಡಿದ್ದ ದೂರಿನಲ್ಲಿ ತಿಳಿಸಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕ ನೀಲೇಶ್ ಚೌಹಾಣ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣಾ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ತಂಡ ಸಿಸಿಟಿವಿ ದೃಶ್ಯಗಳು ಮತ್ತು ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ತನಿಖೆ ಆರಂಭಿಸಿದರು.
ಕೇವಲ 24 ಗಂಟೆಯೊಳಗೆ ಆರೋಪಿತೆ ಯಾಧವ ದುರ್ಗಮ್ಮ ಅವರನ್ನು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಿಂದ ಬಂಧಿಸಿ, ಕಳವು ಮಾಡಿದ 3 ಪವನ್ ಚಿನ್ನದ ಸರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

