ಮಂಗಳೂರು: ನಗರದ ವಾಮಂಜೂರಿನ ಸೆಕೆಂಡ್ ಬಜಾರ್ ಅಂಗಡಿಯಲ್ಲಿ ಗುಂಡು ಹಾರಿ ಎದುರುಪದವು ಮಸೀದಿ ಧರ್ಮಗುರು ಸಫ್ವಾನ್ ಎಂಬವರು ಗಾಯಗೊಂಡ ಪ್ರಕರಣದಲ್ಲಿ, ಆರೋಪಿ ರೌಡಿಶೀಟರ್ ಬದ್ರುದ್ದೀನ್ ಯಾನೆ ಅದ್ದು (35) ಎಂಬಾತನನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ, ಬದ್ರುದ್ದೀನ್ಗೆ ಸೇರಿದ ಮಳಿಗೆಯಲ್ಲಿ ಜ. 6ರಂದು ಆಕಸ್ಮಿಕವಾಗಿ ಗುಂಡು ಹಾರಿ, ಧರ್ಮಗುರು ಸಫ್ಘಾನ್ ಗಾಯಗೊಂಡಿದ್ದರು. ಪ್ರಾರಂಭದಲ್ಲಿ, ಸಫ್ವಾನ್ ಗನ್ ಪರಿಶೀಲನೆ ನಡೆಸುವಾಗ ಫೈರಿಂಗ್ ಆಗಿ ಗಾಯಗೊಂಡಿರುವುದು ಎಂದು ಪ್ರಕರಣವನ್ನು ತಿರುಚಿ ಹೇಳಲಾಗಿತ್ತು. ಆದರೆ ಪೊಲೀಸರು ತೀವ್ರ ತನಿಖೆ ನಡೆಸಿದಾಗ ಪ್ರಕರಣದ ಸತ್ಯಾಸತ್ಯತೆ ಹೊರಬಂದಿದೆ. ಇದರಿಂದ ಗಾಯಾಳು ಸಫ್ವಾನ್ ಅವರೇ ರೌಡಿಶೀಟರ್ ಬದ್ರುದ್ದೀನ್ನನ್ನು ರಕ್ಷಿಸಲು ಸುಳ್ಳು ಮಾಹಿತಿ ನೀಡಿ, ದಾರಿ ತಪ್ಪಿಸಲು ಪ್ರಯತ್ನಿಸಿರುವುದು ಸ್ಪಷ್ಟವಾಗಿ ತಿಳಿದು ಬಂದಿದೆ ಎಂದರು.
ಅಲ್ಲದೆ, ಬದ್ರುದ್ದೀನ್ ಕೈಯಿಂದಲೇ ಗುಂಡು ಹಾರಿರುವುದು ತನಿಖೆಯಿಂದ ತಿಳಿದು ಬಂದಿದೆ. ಆದರೆ ವಿಚಾರಣೆ ವೇಳೆ ಗನ್ ಬಜಪೆಯ ಭಾಸ್ಕರ್ ಅವರದ್ದು ಎಂದು ಹೇಳುವ ಮೂಲಕ ಮತ್ತೊಮ್ಮೆ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಸಫ್ವಾನ್ ಹೇಳಿಕೆ ಗೊಂದಲದಲ್ಲಿದ್ದ ಕಾರಣ ಬದ್ರುದ್ದೀನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬಹಿರಂಗವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಹೇಳಿದರು.
ಘಟನೆ ನಡೆದ ಒಂದು ದಿನದ ಹಿಂದೆ ಪರವಾನಗಿ ಇಲ್ಲದ ಅಕ್ರಮ ಗನ್ ಅನ್ನು ಇಮ್ರಾನ್ ಎಂಬಾತ ಬದ್ರುದ್ದೀನ್ಗೆ ನೀಡಿದ್ದ. ಕೇರಳದ ವ್ಯಕ್ತಿಯೊಬ್ಬನಿಂದ ಇಮ್ರಾನ್ ಗನ್ ಖರೀದಿಸಿದ್ದ ಎಂದು ತಿಳಿದುಬಂದಿದೆ. ಘಟನೆ ವೇಳೆ ಅಲ್ಲಿದ್ದ ಪ್ರತ್ಯಕ್ಷದರ್ಶಿಗಳಿಂದಲೂ ಮಾಹಿತಿ ಪಡೆಯಲಾಗಿದೆ. ಅಲ್ಲದೆ, ಸಫ್ವಾನ್ ಯಾಕೆ ಸುಳ್ಳು ಮಾಹಿತಿ ನೀಡಿದ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಅನುಪಮ್ ಅಗರ್ವಾಲ್ ಮಾಹಿತಿ ನೀಡಿದರು.