ಗೃಹರಕ್ಷಕದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನೆ

0
77


ಉಡುಪಿ : ಶಿಸ್ತು, ತಾಳ್ಮೆ, ದಕ್ಷತೆ ಹಾಗೂ ಬದ್ಧತೆಗೆ ಹೆಸರಾಗಿರುವ ಗೃಹರಕ್ಷಕರಿಗೆ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ದೈಹಿಕವಾಗಿ ಸದೃಢರಾಗಿ ಉತ್ತಮ ಆರೋಗ್ಯ ಹೊಂದಲು ಸಾಧ್ಯ. ಸೇವೆಯಲ್ಲಿ ತಂಡವಾಗಿ ಕೆಲಸ ಮಾಡಲು ಕ್ರೀಡೆ ಪ್ರೇರಣೆ ನೀಡಲಿದೆ ಎಂದು ಮಂಗಳೂರು ಯೆನೆಪೋಯ ವಿಶ್ವವಿದ್ಯಾಲಯ ಕುಲಪತಿ ಡಾ.ವಿಜಯ್​ ಕುಮಾರ್​ ಹೇಳಿದರು.

ಬುಧವಾರ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಘಿದ್ದ ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ ಮಾತನಾಡಿ, ಗೃಹ ರಕ್ಷಕ ದಳವು ಪೊಲೀಸ್​ ಪಡೆಯ ಮತ್ತೊಂದು ಪ್ರಮುಖ ವಿಭಾಗವಾಗಿದೆ. ಗೃಹರಕ್ಷಕರು ಹಗಲು-ರಾತ್ರಿಯೆನ್ನದೇ ತುರ್ತು ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಕ್ರೀಡಾಕೂಟಗಳ ಆಯೋಜನೆ ಮನಸ್ಸಿಗೆ ಮುದ ನೀಡುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ. ಇಂದಿನ ಸೋಲು ಮುಂದಿನ ಗೆಲುವಿಗೆ ದಾರಿಯಾಗಲಿದೆ. ಪ್ರತಿಯೊಬ್ಬರು ಕ್ರೀಡೆಯನ್ನು ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಪ್ರಶಾಂತ್​ ಕುಮಾರ್​ ಶೆಟ್ಟಿ, ವೈದ್ಯೆ ಡಾ.ಶ್ರುತಿ ಬಲ್ಲಾಳ, ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಡಾ.ರೋಶನ್​ ಕುಮಾರ್​ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ, ಚಿಕ್ಕಮಗಳೂರು, ಕಾರವಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗೃಹರಕ್ಷಕ ಕ್ರೀಡಾಪಟುಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಂದೀಪ್​ ಚಿಕ್ಕಮಗಳೂರು ಕ್ರೀಡಾಂಗಣಕ್ಕೆ ಕ್ರೀಡಾಜ್ಯೋತಿ ತಂದರು. ಕ್ರೀಡಾ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಗೃಹರಕ್ಷಕದಳ ಸೆಕೆಂಡ್​ ಇನ್​ ಕಮಾಂಡ್​ ರಾಜೇಶ್​ ಕೆ.ಸಿ ಸ್ವಾಗತಿಸಿ, ಬ್ರಹ್ಮಾವರ ಘಟಕಾಧಿಕಾರಿ ಸ್ಟೀವನ್​ ಪ್ರಕಾಶ್​ ನಿರೂಪಿಸಿ, ಸ್ನೇಹ ಜಿ. ವಂದಿಸಿದರು.

LEAVE A REPLY

Please enter your comment!
Please enter your name here