ಮಾಸ್ಕೋ: ರಷ್ಯಾದ ಜೊತೆಗಿನ ಸಹಕಾರವನ್ನು ಕಡಿಮೆ ಮಾಡುವಂತೆ ಭಾರತದ ಮೇಲೆ ನಿರಂತರ ಒತ್ತಡ ಹೇರುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತೀಕ್ಷ್ಣ ಸಂದೇಶ ರವಾನಿಸಿದ್ದಾರೆ. “ಭಾರತ ಎಂದಿಗೂ ಯಾವುದೇ ವಿದೇಶಿ ಶಕ್ತಿಯ ಆದೇಶಗಳಿಗೆ ಬಗ್ಗುವುದಿಲ್ಲ. ಭಾರತ ಸಾರ್ವಭೌಮ ರಾಷ್ಟ್ರವಾಗಿಯೇ ತನ್ನ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ” ಎಂದು ಪುಟಿನ್ ಭಾರತದ ಪರ ಬ್ಯಾಟಿಂಗ್ ಮಾಡಿದ್ದಾರೆ.
ಸೇಂಟ್ ಪೀಟರ್ಸ್ಬರ್ಗ್ ಅಂತಾರಾಷ್ಟ್ರೀಯ ಆರ್ಥಿಕ ವೇದಿಕೆಯಲ್ಲಿ (SPIEF) ಮಾತನಾಡಿದ ಪುಟಿನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ವೇಳೆ, ಭಾರತದ ಮೇಲೆ ಟ್ರಂಪ್ ಹೇರಿದ್ದ ನಿರ್ಬಂಧಗಳು ಅಮೆರಿಕಕ್ಕೇ ತಿರುಗುಬಾಣ ಆಗಲಿವೆ ಎಂದು ಎಚ್ಚರಿಸಿದರು. “ಭಾರತವು ಯಾವಾಗಲೂ ತನ್ನ ರಾಷ್ಟ್ರೀಯ ಹಿತಾಸಕ್ತಿ, ಸೂಕ್ತ ಬೆಲೆ ಮತ್ತು ತಂತ್ರಜ್ಞಾನದ ಲಾಭವನ್ನು ಆಧರಿಸಿಯೇ ತನ್ನ ಪಾಲುದಾರರನ್ನು ಆಯ್ಕೆ ಮಾಡಿಕೊಳ್ಳುತ್ತದೆ” ಎಂದು ಅವರು ಅಭಿಪ್ರಾಯವ್ಯಕ್ತಪಡಿಸಿದರು.
ಭಾರತವು ಪ್ರಸ್ತುತ ಜಗತ್ತಿನಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತ ಸರ್ಕಾರದ ಕಠಿಣ ಪರಿಶ್ರಮದ ಫಲ ಎಂದು ಪುಟಿನ್ ಬಣ್ಣಿಸಿದ್ದಾರೆ. ಡಿಜಿಟಲ್ ಆರ್ಥಿಕತೆ ಮತ್ತು ಸಾಫ್ಟ್ವೇರ್ ಉದ್ಯಮದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅವರು ಗೌರವಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಭಾರತ ಮತ್ತು ರಷ್ಯಾ ನಡುವಿನ ವ್ಯಾಪಾರ ವಹಿವಾಟು 100 ಬಿಲಿಯನ್ ಡಾಲರ್ ತಲುಪುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ.
“ರಷ್ಯಾ ಜೊತೆಗಿನ ಸಹಕಾರ ಸೇರಿದಂತೆ ಕೆಲವು ವಿಷಯಗಳಲ್ಲಿ ಅಮೆರಿಕವು ಭಾರತದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ಆದರೆ ,150 ಕೋಟಿ ಜನಸಂಖ್ಯೆ ಹೊಂದಿರುವ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಲು ಯತ್ನಿಸುವುದು ಸಂಪೂರ್ಣ ವ್ಯರ್ಥ ಶ್ರಮ ಎಂಬುದು ಈಗಲಾದರೂ ಎಲ್ಲರಿಗೂ ಅರ್ಥವಾಗಬೇಕು” ಎಂದು ಪುಟಿನ್ ಹೇಳಿದ್ದಾರೆ.
ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುತ್ತಿರುವುದಕ್ಕಾಗಿ ಭಾರತದ ಮೇಲೆ ಟ್ರಂಪ್ ಸರ್ಕಾರ ವಿಧಿಸಿದ್ದ ನಿರ್ಬಂಧಗಳಿಗೆ ಪ್ರತಿಕ್ರಿಯೆಯಾಗಿ ಪುಟಿನ್ ಈ ಕಠಿಣ ಹೇಳಿಕೆಗಳನ್ನು ನೀಡಿದ್ದಾರೆ. ಭಾರತವು ರಷ್ಯಾದ ತೈಲವನ್ನು ಖರೀದಿಸುವ ಮೂಲಕ ಉಕ್ರೇನ್ ಯುದ್ಧಕ್ಕೆ ಧನಸಹಾಯ ನೀಡುತ್ತಿದೆ ಎಂದು ಆರೋಪಿಸಿದ್ದ ಟ್ರಂಪ್, ಭಾರತದ ಉತ್ಪನ್ನಗಳ ಮೇಲೆ ಶೇ. 25ರಷ್ಟು ಸುಂಕವನ್ನು ಹೇರಿದ್ದರು. ಆದರೆ, ಭಾರತವು ಈ ಆರೋಪವನ್ನು ಮೊದಲಿನಿಂದಲೂ ನಿರಾಕರಿಸುತ್ತಾ ಬಂದಿದೆ ಹಾಗೂ ಪಾಶ್ಚಿಮಾತ್ಯ ದೇಶಗಳೇ ಸ್ವತಃ ರಷ್ಯಾದಿಂದ ಗ್ಯಾಸ್ ಮತ್ತು ತೈಲವನ್ನು ಖರೀದಿಸುತ್ತಿರುವುದನ್ನು ಭಾರತ ಹಲವು ಬಾರಿ ಜಾಗತಿಕ ವೇದಿಕೆಯಲ್ಲಿ ಎತ್ತಿ ತೋರಿಸಿದೆ.
ಜಾಗತಿಕ ಒತ್ತಡಗಳ ನಡುವೆಯೂ ಭಾರತದ ವಿದೇಶಾಂಗ ಸಚಿವಾಲಯವು ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಭಾರತದ ಇಂಧನ ಭದ್ರತೆ ಮತ್ತು ದೇಶದ ಜನರಿಗೆ ಕೈಗೆಟುಕುವ ದರದಲ್ಲಿ ಇಂಧನ ನೀಡುವುದು ಭಾರತದ ಮೊದಲ ಆದ್ಯತೆಯಾಗಿದೆ ಎಂದಿದೆ.

