ಚಾಮರಾಜನಗರ : ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.
ಇಲ್ಲಿನ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾದಿಯಾ (19) ಹಾಗೂ ನಾಗೇಂದ್ರ (21) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.
ಪಾಲಾರ್ ಗ್ರಾಮದ ನಾದಿಯಾಳನ್ನು ನಾಗೇಂದ್ರ ಪ್ರೀತಿಸುತ್ತಿದ್ದ. ಇಬ್ಬರ ಮದುವೆಗೆ ಮನೆಯವರು ಒಪ್ಪಿರಲಿಲ್ಲ. ಮೂರು ದಿನಗಳ ಹಿಂದೆ ನಾಗೇಂದ್ರ ಜೊತೆಗೆ ನಾದಿಯಾ ಪೊನ್ನಾಚಿಗೆ ಹೋಗಿದ್ದಳು.
ನಾಗೇಂದ್ರ ತನ್ನ ತಾತನ ಮನೆಗೆ ನಾದಿಯಾಳನ್ನು ಕರೆದುಕೊಂಡು ಹೋಗಿದ್ದ. ಈ ವೇಳೆ ನಾದಿಯಾ ತಂದೆ ಮಹದೇವ ಮಿಸ್ಸಿಂಗ್ ಕಂಪ್ಲೇಂಟ್ ಕೊಟ್ಟಿದ್ದರು. ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬೆನ್ನಲ್ಲೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ನಾದಿಯಾ ಹಾಗೂ ನಾಗೇಂದ್ರ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಠಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

