ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕೆ ಒಂದು ದಿನದ ಸಮಾವೇಶ ನಡೆಸಲು ಸೂಚನೆ
ಮಂಗಳೂರು : ಮಂಗಳೂರು ತಾಲೂಕು ಗ್ಯಾರಂಟಿ ಸಮಿತಿಯ ಕಾರ್ಯಚಟುವಟಿಕೆಗಳ ಕುರಿತು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿʼಸೋಜಾ ಅವರು ಸಮಾಲೋಚನೆ ನಡೆಸಿ, ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಮತ್ತಷ್ಟು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಒಂದು ದಿನದ ಸಮಾವೇಶ ಆಯೋಜನೆ ಮಾಡುವಂತೆ ಸೂಚನೆ ನೀಡಿದರು.
ಮಂಗಳೂರು ತಾಲೂಕು ಗ್ಯಾರಂಟಿ ಸಮಿತಿಯು ಜನರಿಗೆ ಅನೇಕ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ, ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಅನೇಕ ಫಲಾನುಭವಿಗಳಿಗೆ ಮಾರ್ಗದರ್ಶನ ಹಾಗೂ ಉತ್ತೇಜನ ನೀಡುತ್ತಿದೆ. ಸಮಿತಿಯು ಎಲ್ಲಾ ವಾರ್ಡ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಅರ್ಹತೆಯಿಂದ ವಂಚಿತರಾಗಿದ್ದ ಕೆಲವರಿಗೆ ದಾಖಲೆಗಳನ್ನು ಸರಿಪಡಿಸಿ ಯೋಜನೆಯ ಪ್ರಯೋಜನ ದೊರಕಿಸಿಕೊಡುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿಯೇ ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿರುವ ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿಯವರು ಅಪಪ್ರಚಾರ ನಡೆಸಿ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡುತ್ತಿರುವ ಸಂದರ್ಭಗಳಲ್ಲಿ, ಯೋಜನೆಯ ನೈಜ ಪ್ರಯೋಜನಗಳನ್ನು ಜನರಿಗೆ ಸರಿಯಾಗಿ ತಿಳಿಸುವ ಕೆಲಸವನ್ನು ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಮೂಲಕವೇ ನಡೆಸಬೇಕು ಎಂದು ಮಂಗಳೂರು ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಕಾಂಬ್ಳಿ ಅವರಿಗೆ ಐವನ್ ಡಿʼಸೋಜಾ ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಐವನ್ ಡಿʼಸೋಜಾ ಅವರು, ಗ್ಯಾರಂಟಿ ಯೋಜನೆಗಳ ಕುರಿತಾಗಿ ಇನ್ನೂ ಹಲವು ಯಶಸ್ವಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅಗತ್ಯವಿದ್ದು, ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಒಂದು ದಿನದ ದೊಡ್ಡ ಸಮಾವೇಶವನ್ನು ಆಯೋಜಿಸುವುದು ಅತ್ಯವಶ್ಯಕ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಸಮಿತಿ ಸದಸ್ಯರಾದ ಅಲ್ಸ್ಟೈನ್ ಡಿʼಕುನ್ಹ, ರಿತೇಶ್ ಶಕ್ತಿನಗರ, ನೀತು ಡಿʼಸೋಜಾ, ವಿದ್ಯಾ ಅತ್ತಾವರ, ನವಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು

