ಕನ್ನಡದಲ್ಲಿ ಶಿಕ್ಷಣ ಪಡೆದರೆ ಉದ್ಯೋಗಾವಕಾಶ

0
20

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಚಿದಂಬರ ಬೈಕಂಪಾಡಿ ಆಶಯ

ಮಂಗಳೂರು : ಕನ್ನಡದಲ್ಲಿ ಶಿಕ್ಷಣ ಪಡೆದರೆ ಉದ್ಯೋಗ ಸಿಗುವುದಿಲ್ಲ ಎನ್ನುವ ಸ್ಥಿತಿಯಿಂದಾಗಿ ಇಂಗ್ಲೀಷ್‌ನಲ್ಲಿ ಕಲಿಯುವ ಅನಿವಾರ್ಯತೆ ಬೆಳೆದಿದೆ. ಕನ್ನಡದ ಬಗ್ಗೆ ತಾತ್ಸಾರದ ಮನೋಭಾವನೆ ಮೂಡಿದೆ. ಕನ್ನಡದಲ್ಲಿ ಕಲಿತವರಿಗೆ ಉದ್ಯೋಗಾವಕಾಶದ ಭರವಸೆ ಮೂಡಿದರೆ ಮಾತ್ರ ಭಾಷೆಯ ಬಗ್ಗೆ ಅಭಿಮಾನ ಬೆಳೆಯಲು ಸಾಧ್ಯ ಎಂದು ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಹೇಳಿದರು.

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಬುಧವಾರ ಸನ್ಮಾನ ಸ್ವೀಕರಿಸಿ ಪತ್ರಕರ್ತರ ಜತೆ ಸಂವಾದ ನಡೆಸಿದ ಅವರು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನ ಅನಿರೀಕ್ಷಿತವಾಗಿ ಒಲಿದು ಬಂದ ಜವಾಬ್ದಾರಿ .ನನ್ನನ್ನು ಗುರುತಿಸಿದ್ದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ದೊಡ್ಡತನ’ಎಂದರು.
ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ನಾನು ಬಳಿಕ ಪತ್ರಕರ್ತನಾದೆ.

ಹಿಂದೆ ಸಾಹಿತಿಯಾದವರು ಪತ್ರಿಕಾರಂಗಕ್ಕೆ ಬರುತ್ತಿದ್ದರು. ಈಗ ಅಂತಹ ಬೆಳವಣಿಗೆ ಇಲ್ಲ. ಕತೆ ಬರೆದರೆ ಓದುವವರು ಕಡಿಮೆಯಾಗಿದ್ದಾರೆ. ಸುದ್ದಿ ಓದುವವರು ಕಡಿಮೆಯಾಗಿದ್ದಾರೆ. ಯುವ ಪತ್ರಕರ್ತರಲ್ಲಿ ಕೇಳುವ ವ್ಯವದಾನ ಕಡಿಮೆಯಾಗಿದೆ. ನಾವು ಎಲ್ಲ ಕಲಿತವರು ಎಂಬ ಭ್ರಮಾಲೋಕದಿಂದ ಹೊರ ಬರಬೇಕು. ಪತ್ರಕರ್ತರು ಹೆಚ್ಚು ಅಧ್ಯಯನ ಶೀಲರಾಗಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಕೆ.ಆನಂದ ಶೆಟ್ಟಿ ಸನ್ಮಾನ ನೆರವೇರಿಸಿ ಶುಭ ಹಾರೈಸಿದರು.  ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್., ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ ಉಪಸ್ಥಿತರಿದ್ದರು.

ಪ್ರೆಸ್ ಕ್ಲಬ್  ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here