ಕಾಸರಗೋಡು : ಕೊಡಗು ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಕಾಳೆಂಗಡ ದಮಯಂತಿ ತಿಮ್ಮಯ್ಯ ಅವರು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದಿಂದ ಪ್ರದಾನವಾಗುವ ಪ್ರತಿಷ್ಠಿತ ಅಂತಾರಾಜ್ಯ “ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಪ್ರಶಸ್ತಿ” ಹಾಗೂ Teachers Achievement Award ಗೆ ಆಯ್ಕೆಯಾಗಿದ್ದಾರೆ.
ಜುಲೈ 26ರಂದು ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ನಡೆಯಲಿರುವ **“ಕರ್ನಾಟಕ – ಗಡಿನಾಡು ಕನ್ನಡ ಸಮ್ಮೇಳನ”**ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುವುದು.
ಸಮ್ಮೇಳನವು ಮಾಜಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್, ಐಎಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯ ಕೊಡುಗೆ ಹಾಗೂ ಸಾಧನೆಯನ್ನು ಪರಿಗಣಿಸಿ ಕಾಳೆಂಗಡ ದಮಯಂತಿ ತಿಮ್ಮಯ್ಯ ಅವರನ್ನು ಸನ್ಮಾನಿಸಲಾಗುತ್ತಿದೆ.
ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

