ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ 2027ರಲ್ಲಿ ನಡೆಯಲಿದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ವಿವಿಧ ಸಮಿತಿಗಳು ಶೀಘ್ರವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಹೇಳಿದರು.
ಇಲ್ಲಿನ ಬಾಹುಬಲಿ ಪ್ರವಚನ ಮಂದಿರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಹಾಮಸ್ತಕಾಭಿಷೇಕದ ವಿವಿಧ ಸಮಿತಿ ಹಾಗೂ ಸಮಿತಿಯ ಪದಾಧಿಕಾರಿಗಳನ್ನು ಘೋಷಿಸಿ ಅವರು ಮಾತನಾಡಿದರು.
ಮುಂದಿನ ವರ್ಷ ಫೆಬ್ರುವರಿ ತಿಂಗಳಲ್ಲಿ ಮಹಾಮಸ್ತಕಾಭಿಷೇಕ ನಡೆಯುವ ಸಂದರ್ಭದಲ್ಲಿ ಕಾರ್ಕಳ ಪೇಟೆ ಹಾಗೂ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಸ್ಥಳೀಯ ಶಾಸಕ ವಿ. ಸುನಿಲ್ ಕುಮಾರ್ ಈ ವಿಚಾರವನ್ನು ಈಗಾಗಲೇ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ದಿನಾಂಕವನ್ನು ಮುಂದಿನ ತಿಂಗಳ 19ರಂದು ಘೋಷಿಸಲಾಗುವುದು ಎಂದರು.
ಧಾರ್ಮಿಕ ಕಾರ್ಯಕ್ರಮ, ಸಾರ್ವಜನಿಕರಿಗೆ ಊಟೋಪಚಾರ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪಾರ್ಕಿಂಗ್ ವ್ಯವಸ್ಥೆ ಹೀಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದವು.
ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ ಮಂಗಳೂರು, ಕೋಶಾಧಿಕಾರಿ ಮೋಹನ್ ಪಡಿವಾಳ್, ಸಮಿತಿಯ ಉಪಾಧ್ಯಕ್ಷರಾದ ಕೆ ಜೀವಂಧರ ಬಲ್ಲಾಳ್, ರತ್ನಾಕರ ರಾಜ ಅರಸ್, ಸೂರಜ್ ಕುಮಾರ್, ಅನಂತರಾಜ್ ಪೂವಣಿ, ಸಂಪತ್ ಸಾಮ್ರಾಜ್ಯ, ಮಹಾವೀರ್ ಹೆಗ್ಡೆ, ಸುಧೀರ್ ಪಡಿವಾಳ್ ಹಾಗೂ ಸಮಿತಿಯ ಸಂಚಾಲಕರು ಉಪಸ್ಥಿತರಿದ್ದರು.

