ಕುಂದಾಪುರ : ಕಾಲು ಜಾರಿ ಕಿಂಡಿ ಅಣೆಕಟ್ಟಿಗೆ ಬಿದ್ದು ಯುವತಿ ಸಾವು

0
332

ಕುಂದಾಪುರ : ದನಗಳಿಗೆ ಹುಲ್ಲು ತರಲು ಹೋಗಿದ್ದ ಯುವತಿ ಕಾಲು ಜಾರಿ ಕಿಂಡಿ ಅಣೆಕಟ್ಟಿನ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆಯ ಜಂಬೆಹಾಡಿ ಎಂಬಲ್ಲಿ ನಡೆದಿದೆ.

ಜಡ್ಡಿನಗದ್ದೆಯ ಜಂಬೆಹಾಡಿ ಸಂಜೀವ ನಾಯ್ಕ ಮತ್ತು ನರ್ಸಿ ದಂಪತಿಯ ಪುತ್ರಿ 23 ವರ್ಷದ ಮೂಕಾಂಬಿಕಾ ಮೃತ ದುರ್ದೈವಿ. ಮೂಕಾಂಬಿಕಾ ಅಮಾಸೆಬೈಲಿನ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪಾಳಿ ಮಧ್ಯಾಹ್ನದ ಬಳಿಕ ಇದ್ದುದರಿಂದ ಬೆಳಗ್ಗೆ ಹುಲ್ಲು ತರಲು ಅತ್ತಿಗೆ ಅಶ್ವಿನಿಯೊಂದಿಗೆ ತೋಟಕ್ಕೆ ಹೋಗಿದ್ದರು. ಮನೆಗೆ ಹಿಂದಿರುಗುವಾಗ ಅಶ್ವಿನಿ ಹುಲ್ಲಿನ ಹೊರೆಯನ್ನು ಹೊತ್ತುಕೊಂಡು ಮನೆಯ ಕಡೆಗೆ ಹೊರಟಿದ್ದು, ಮೂಕಾಂಬಿಕಾ ಹಿಂಬಾಲಿಸುತ್ತಿದ್ದರು. ಮನೆ ತಲುಪಿದ ಅಶ್ವಿನಿ ಹಿಂದಿರುಗಿ ನೋಡಿದಾಗ ಮೂಕಾಂಬಿಕಾ ಜೊತೆಗೆ ಇರಲಿಲ್ಲ. ಅವರನ್ನು ಕರೆಯುತ್ತ ಪುನಃ ತೋಟದ ಕಡೆಗೆ ತೆರಳಿದಾಗ ಅಣೆಕಟ್ಟಿನ ದಂಡೆಯ ಮೇಲೆ ಹುಲ್ಲು ಕೊಯ್ಯುವ ಕತ್ತಿ ಕಾಣಿಸಿದೆ.

ಅಶ್ವಿನಿಯ ಬೊಬ್ಬೆ ಕೇಳಿ ಮನೆಯವರು ಓಡಿ ಬಂದು ಅಣೆಕಟ್ಟಿನಲ್ಲಿ ಹುಡುಕಿದ್ದು ಮೃತದೇಹ ಪತ್ತೆಯಾಗಿದೆ. ಮೂಕಾಂಬಿಕಾ ತಂದೆ, ತಾಯಿ, 6 ಮಂದಿ ಸಹೋದರಿಯರು ಮತ್ತು ಸಹೋದರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here