ಮುಡಿಪು; ‘ಸಂಗೀತ, ನೃತ್ಯ, ಸಾಹಿತ್ಯ ಇವುಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯ ಸಾಧ್ಯ. ಸಾಹಿತ್ಯಕ್ಷೇತ್ರ ಮತ್ತು ಸಮಾಜದಲ್ಲಿ ಪರಸ್ಪರ ಕೊಡುಕೊಳ್ಳುವಿಕೆ ನಡೆಯದೇ ಇದ್ದರೆ ಅದು ಅಪಾಯಕಾರಿ ಸಂಗತಿ’ ಎಂದು ಹೆಸರಾಂತ ಕಲಾವಿದೆ ಡಾ. ಕೆ.ಎಸ್ ಪವಿತ್ರ ಹೇಳಿದರು.
ಅವರು ಮಂಗಳೂರು ವಿಶ್ವವಿದ್ಯಾಲಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ವಿವೇಕ ರೈ ವಿಚಾರ ವೇದಿಕೆಯಲ್ಲಿ ಕನಕ ಜಯಂತಿ ಪ್ರಯುಕ್ತ ನಡೆದ ‘ಕನಕ ಕೀರ್ತನ ಗಂಗೋತ್ರಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ‘ಕನಕದಾಸರ ಕೀರ್ತನೆಗಳಲ್ಲಿ ವೈಚಾರಿಕತೆ, ಭಾವನಾತೀವ್ರತೆ ಇದೆ. ನಾವು ಅಹಂ ಬಿಟ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕವಾಗಿ ಕೆಲಸ ಮಾಡದೇ ಇದ್ದರೆ ಸಮಾಜದಲ್ಲಿ ಎಲ್ಲಾ ಬಗೆಯ ಅಸಮಾನತೆ ಸೃಷ್ಟಿಯಾಗುವ ಅಪಾಯವಿದೆ’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರೊ. ನಾಗಪ್ಪ ಗೌಡ ಆರ್ ಮಾತಾಡಿ, ಕರ್ನಾಟಕ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಬಸವಣ್ಣನಂತೆ ಕನಕದಾಸರು ಪ್ರಮುಖರು. ಇಂದಿನ ಯುವ ಜನಾಂಗವು ಕನಕದಾಸರನ್ನು ಕೇವಲ ಭಕ್ತಿಯ ನೆಲೆಯಲ್ಲಿ ನೋಡದೆ ವೈಚಾರಿಕ ಹಿನ್ನೆಲೆಯಲ್ಲಿ ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.
ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಎಚ್. ದೇವೇಂದ್ರಪ್ಪ, ಪ್ರೊ. ಶಿವರಾಮ ಶೆಟ್ಟಿ, ಪ್ರೊ. ಸೋಮಣ್ಣ ಹೊಂಗಳ್ಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ್ ಕುಂಬ್ಳೆ ಸ್ವಾಗತಿಸಿ, ವಿದ್ಯಾರ್ಥಿನಿ ಆಶ್ರಿತಾ ವಂದಿಸಿದರು.ವಿದ್ಯಾರ್ಥಿ ಅಭಿಷೇಕ್ ವಾಲ್ಮೀಕಿ ಕಾರ್ಯಕ್ರಮ ನಿರೂಪಿಸಿದರು.

