ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಿ: ಡಾ. ವಿರೂಪಾಕ್ಷ ದೇವರಮನೆ

0
13

ಉಡುಪಿ: ವಿದ್ಯಾರ್ಥಿ ಜೀವನ ಚಿನ್ನದ ಗಣಿಯಿದ್ದಂತೆ. ಈ ಹಂತದಲ್ಲಿ ಅವಕಾಶಗಳ ಮಹಾಪೂರವೇ ಇರುತ್ತದೆ. ಆದರೆ ಅವಕಾಶಗಳು ಹೆಚ್ಚಾದಂತೆ ಅಸಡ್ಡೆಯ ಮನೋಭಾವವೂ ಬೆಳೆಯುವ ಅಪಾಯವಿದೆ ಎಂದು ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಹೇಳಿದರು.

ಇಲ್ಲಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಹೊಸದಾಗಿ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಶೈಕ್ಷಣಿಕ ಹಾಗೂ ಸಾಮಾಜಿಕ ವಾತಾವರಣಕ್ಕೆ ಪರಿಚಯಿಸುವ ‘ಅಭಿವಿನ್ಯಾಸ’ ವಿದ್ಯಾರ್ಥಿ ಪ್ರವೇಶ–ಪರಿಚಯ ಕಾರ್ಯಕ್ರಮವನ್ನು ಸೋಮವಾರ ಪುರಭವನದಲ್ಲಿ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಯೌವ್ವನದಲ್ಲಿ ಉದ್ಭವಿಸುವ ಭಾವನೆಗಳನ್ನು ಗುರುತಿಸಿ, ಅವುಗಳನ್ನು ನಿಯಂತ್ರಿಸುವ ಕೌಶಲ ಬೆಳೆಸಿಕೊಳ್ಳಬೇಕು. ಹತಾಶೆ, ತಿರಸ್ಕಾರ ಹಾಗೂ ಕೀಳರಿಮೆಯ ಭಾವನೆಗಳನ್ನು ಹಂತಹಂತವಾಗಿ ದೂರ ಮಾಡಿಕೊಳ್ಳಬೇಕು ಎಂದರು.

ಪೋಷಕರೊಂದಿಗೆ ಸಾಧ್ಯವಾದಷ್ಟು ಆತ್ಮೀಯ ಸಂಬಂಧವನ್ನು ಹೊಂದಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸ್ನೇಹಿತರ ಒತ್ತಡಕ್ಕೆ ಒಳಗಾಗಿ ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

‘ಮೊದಲ ವರ್ಷದಲ್ಲಿಯೇ ನಿಮ್ಮ ವ್ಯಕ್ತಿತ್ವವನ್ನು ವಿಶ್ಲೇಷಿಸಿಕೊಂಡು, ನಿಮ್ಮ ಸಾಮರ್ಥ್ಯಗಳು ಹಾಗೂ ದೌರ್ಬಲ್ಯಗಳನ್ನು ಅರಿತುಕೊಳ್ಳಿ. ಮಾನಸಿಕ ಆರೋಗ್ಯವೂ ದೈಹಿಕ ಆರೋಗ್ಯದಷ್ಟೇ ಮುಖ್ಯ. ಒಂಟಿತನ, ಖಿನ್ನತೆ ಸೇರಿದಂತೆ ಯಾವುದೇ ಮಾನಸಿಕ ಸಮಸ್ಯೆ ಎದುರಾದಲ್ಲಿ ಮುಕ್ತವಾಗಿ ಹಂಚಿಕೊಳ್ಳಿ. ಅಗತ್ಯವಿದ್ದಲ್ಲಿ 14416 ಸಹಾಯವಾಣಿಗೆ ಕರೆ ಮಾಡಿ ನೆರವು ಪಡೆಯಬಹುದು’ ಎಂದು ಸಲಹೆ ನೀಡಿದರು.

ಉಡುಪಿ ಲೀಡ್ ಬ್ಯಾಂಕ್‌ನ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಆರ್ಥಿಕ ಸಾಕ್ಷರತೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಮೈಗೂಡಿಸಿಕೊಂಡು ಕಾಲೇಜಿನ ಘನತೆಯನ್ನು ಕಾಪಾಡಬೇಕು. ಗಾಂಧೀಜಿ, ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಅವರ ಚಿಂತನೆಗಳನ್ನು ಅರಿತುಕೊಂಡು, ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಜ್ಞಾನ ಹಾಗೂ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಭಟ್ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಜೇಂದ್ರ ಕೆ. ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪುರುಷೋತ್ತಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಶರತ್ ಕುಮಾರ್ ವಂದಿಸಿದರು.