ಮಂಗಳೂರು: ನಗರದ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25) ಬಂಧಿತ ವ್ಯಕ್ತಿಯಾಗಿದ್ದಾನೆ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ನಲ್ಲಿ ಅನರುಲ್ ಶೇಖ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.
ಅನರುಲ್ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.