ಉಡುಪಿ: ಸಿಟಿ ಬಸ್ ನಿಲ್ದಾಣ ಬಳಿ ಭಾನುವಾರ ವಾಣಿಜ್ಯ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಹಿನ್ನೆಲೆಯಲ್ಲಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಸ್ಥಳ ಪರಿಶೀಲನೆ ನಡೆಸಿ, ಅಗ್ನಿಶಾಮಕ ಸೇವೆಗಳನ್ನು ಆಧುನೀಕರಿಸುವ ಮತ್ತು ಸಾರ್ವಜನಿಕ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವ ಭರವಸೆ ನೀಡಿದ್ದಾರೆ.
ಪ್ರಸ್ತುತ ಅಗ್ನಿಶಾಮಕ ದಳದಲ್ಲಿರುವ ಸೌಲಭ್ಯಗಳು ತುರ್ತು ಪರಿಸ್ಥಿತಿಗೆ ತಕ್ಕಂತೆ ವೇಗವಾಗಿ ಸ್ಪಂದಿಸಲು ಸಾಕಾಗುತ್ತಿಲ್ಲ. ಹಳೆಯ ವಾಹನಗಳು ಮತ್ತು ಉಪಕರಣಗಳ ಬದಲಿಗೆ, ಹೊಸ ತಂತ್ರಜ್ಞಾನದ ಸುಸಜ್ಜಿತ ಅಗ್ನಿಶಾಮಕ ವಾಹನಗಳ ತುರ್ತು ಅವಶ್ಯಕತೆಯಿದೆ ಎಂದು ಶಾಸಕರು ತಿಳಿಸಿದ್ದಾರೆ.
ಬ್ರಹ್ಮಾವರ ಮತ್ತು ಮಣಿಪಾಲದಲ್ಲಿ ಹೊಸ ಅಗ್ನಿಶಾಮಕ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆ ಜಾರಿಯಲ್ಲಿದೆ. ಮಣಿಪಾಲದ ಕಾಮಗಾರಿ ಈಗಾಗಲೇ ಆರಂಭವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನಗರದ ಮೊಬೈಲ್ ಮತ್ತು ಚಪ್ಪಲಿ ಅಂಗಡಿಗಳಂತಹ ವಾಣಿಜ್ಯ ಮಳಿಗೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಅಂಗಡಿ ಮಾಲೀಕರಿಗೆ ಅಗ್ನಿಶಾಮಕ ಸಾಧನಗಳ ಬಳಕೆ ಬಗ್ಗೆ ತರಬೇತಿ ನೀಡುವುದರ ಜೊತೆಗೆ, ಅಗ್ನಿಶಾಮಕ ಕಿಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗುವುದು. ಅಗ್ನಿ ಅವಘಡದಿಂದ ಉಂಟಾದ ನಷ್ಟದ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರದ ವತಿಯಿಂದ ಸಿಗುವ ಗರಿಷ್ಠ ಪರಿಹಾರ ಬಗ್ಗೆ ಆದ್ಯತೆ ನೀಡಲಾಗುವುದು.
ಇಲಾಖೆಯ ವ್ಯವಸ್ಥೆಯಲ್ಲಿ ಕೆಲವೊಂದು ಕೊರತೆಗಳಿದ್ದು, ಅವುಗಳನ್ನು ಸರಿಪಡಿಸಲು ನಾವು ಬದ್ಧರಿದ್ದೇವೆ. ಬೆಂಕಿ ಬಿದ್ದಾಗ ಕ್ಷಿಪ್ರವಾಗಿ ಸ್ಪಂದಿಸುವುದು ನಮ್ಮ ಆದ್ಯತೆ. ಮುಂದಿನ ದಿನಗಳಲ್ಲಿ ಅಗ್ನಿಶಾಮಕ ಸೇವೆಗಳನ್ನು ಇನ್ನಷ್ಟು ಬಲಪಡಿಸುವ ಮೂಲಕ ಅಹಿತಕರ ಘಟನೆಗಳನ್ನು ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಯಶ್ಪಾಲ್ ಸುವರ್ಣ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರು, ಮಾಜಿ ಅಧ್ಯಕ್ಷರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

