ಮಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆದರೆ, ಯಾವುದೇ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಘಾಟ್ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಆತಂಕವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ಕರಾವಳಿ ಭಾಗದಲ್ಲಿ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದೇ ವೇಳೆ, ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ನಗರದ ಹಲವು ಪ್ರದೇಶಗಳಲ್ಲಿ ಸಾಧಾರಣದಿಂದ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸಿ ಸುರಕ್ಷಿತವಾಗಿರಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

