ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಉಡುಪಿ ಜಿಲ್ಲೆಯ 868 ಅಸಹಾಯಕರಿಗೆ ಮಾಸಾಶನದ ನೆರವು ಹಾಗೂ 779 ವಿಶೇಷ ಚೇತನರಿಗೆ ಉಚಿತ ಸಲಕರಣೆಗಳ ವಿತರಣೆ ಮಾಡಲಾಗಿದೆ.
ಹಲವಾರು ಕಾರಣಗಳಿಗೆ ತಮ್ಮ ವೃದ್ಧಾಪ್ಯದ ಜೀವನದಲ್ಲಿ ಆರೈಕೆ ಮಾಡುವವರು ಯಾರೂ ಇಲ್ಲದೆ ಅನಾಥರಾಗಿರುವ ಅದೆಷ್ಟೋ ಹಿರಿ ಜೀವಗಳನ್ನು ಗಮನಿಸಬಹುದು. ತಮ್ಮ ಇಳಿ ವಯಸ್ಸಿನಲ್ಲಿ ನಡೆದಾಡಲು, ದುಡಿಯಲು ಸಾಧ್ಯವಾಗದೇ, ಜೀವನ ನಿರ್ವಹಣೆ ಹಾಗೂ ಒಪ್ಪತ್ತಿನ ಊಟಕ್ಕೂ ಪರದಾಡುವವರನ್ನು ಕಾಣುತ್ತೇವೆ. ದೈನಂದಿನ ಜೀವನ ನಿರ್ವಹಣೆ ಸಮಸ್ಯೆಯೊಂದಿಗೆ ವಯೋ ಸಹಜವಾದ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುವುದನ್ನು ಕಾಣುತ್ತೇವೆ. ಇಂತವರಿಗಾಗಿಯೇ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರು ‘ಮಾಸಾಶನ’ ಕಾರ್ಯಕ್ರಮವನ್ನು ಜಾರಿಗೆ ತಂದರು. ದುಡಿಯಲು ಶಕ್ತಿಯಿಲ್ಲದೇ ಅತ್ಯಂತ ಅಸಹಾಯಕ ಸ್ಥಿತಿಯಲ್ಲಿರುವ ವ್ಯಕ್ತಿಗಳ ಜೀವನ ನಿರ್ವಹಣೆಗಾಗಿ ಪ್ರತೀ ತಿಂಗಳು ಸಂಸ್ಥೆಯಿಂದ ಮಾಸಾಶನ ನೀಡುವ ವ್ಯವಸ್ಥೆ ಇದಾಗಿದೆ.
ವಿವಿಧ ಗಂಭೀರ ಕಾಯಿಲೆಯಿಂದ ಬಳಲುತ್ತಾ, ತೀರ ಸಂಕಷ್ಟದಲ್ಲಿರುವ ಅಂಗವಿಕಲರಿಗೆ ಹಾಗೂ ಅಸಹಾಯಕ ವಯೋವೃದ್ಧರಿಗೆ ಈ ಮಾಸಾಶನವನ್ನು ನೀಡಲಾಗುತ್ತಿದೆ. ಇಂತಹ ಅಶಕ್ತರಿಗೆ ಪ್ರತೀ ತಿಂಗಳು ರೂ.1,000 ದಿಂದ ರೂ.3,000ದ ವರೆಗೆ ಮಾಸಾಶನವನ್ನು ಯೋಜನೆಯ ಮೂಲಕ ತಲುಪಿಸಲಾಗುತ್ತಿದೆ. ಇದರಂತೆ ಜಿಲ್ಲೆಯ 868 ಅಸಹಾಯಕ ವ್ಯಕ್ತಿಗಳಿಗೆ ಪ್ರತೀ ತಿಂಗಳು ಈ ಮಾಸಾಶನವನ್ನು ತಲುಪಿಸಿ ಅವರ ಜೀವನ ನಿರ್ವಹಣೆಗೆ ನೆರವನ್ನು ನೀಡಲಾಗುತ್ತಿದೆ.
ವಿಶೇಷ ಚೇತನರಿಗೆ ಸಲಕರಣೆಗಳ ವ್ಯವಸ್ಥೆ :
ಹಲವರು ಹುಟ್ಟಿನಿಂದ, ಯೌವನದಲ್ಲಿ ಅಥವಾ ವೃದ್ಧಾಪ್ಯದಲ್ಲಿ ಬೇರೆ ಬೇರೆ ಕಾರಣಗಳಿಂದ ಎಲ್ಲರಂತೆ ಬದುಕುವ ಸಾಮರ್ಥ್ಯವನ್ನು ಕಳೆದುಕೊಂಡಿರುತ್ತಾರೆ. ಕೆಲವರಿಗೆ ಹುಟ್ಟಿನಿಂದಲೇ ಕುರುಡು, ಅಂಗವಿಕಲತೆ ಸಮಸ್ಯೆಗಳು ಬಂದರೆ, ಇನ್ನು ಕೆಲವರಿಗೆ ದುರದೃಷ್ಟವಶಾತ್ ಅಪಘಾತಗಳು, ಮಾರಕ ರೋಗಗಳು ಕಾಣಿಸಿಕೊಳ್ಳುತ್ತಿವೆ. ಇದನ್ನು ಸಂಪೂರ್ಣವಾಗಿ ಸರಿಪಡಿಸಲು ಆಗದೇ ಇದ್ದಲ್ಲಿ ಕೆಲವೊಂದು ಬದಲಿ ಪರಿಹಾರಗಳಿವೆ. ಈ ಸಮಸ್ಯೆಗಳನ್ನು ಮನಗಂಡು ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಇಂತಹ ವಿಶೇಷ ಚೇತನರಿಗೆ ವಿವಿಧ ಸಲಕರಣೆಗಳನ್ನು ನೀಡುವ ‘ಜನಮಂಗಲ’ ಎನ್ನುವ ಉದಾತ್ತ ಯೋಜನೆಯನ್ನು ಪ್ರಾರಂಭಿಸಿದರು. ಈ ಕಾರ್ಯಕ್ರಮದಲ್ಲಿ ಗಾಲಿ ಕುರ್ಚಿ, ಶೌಚಾಲಯದ ಬಳಕೆಗಾಗಿ ಗಾಲಿ ಕುರ್ಚಿ, ನೀರು ಹಾಸಿಗೆ, ನಡೆಗೋಲು ಮೊಣಕೈ ಊರುಗೋಲು ಮೊದಲಾದ ಸಲಕರಣೆಗಳನ್ನು ವಿತರಿಸಲಾಗುತ್ತಿದೆ. ಈ ಎಲ್ಲಾ ಸಲಕರಣೆಗಳನ್ನು ಉಚಿತವಾಗಿ ನೀಡುತ್ತಿದ್ದು, ವಿಕಲ ಚೇತನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಸಲಕರಣೆಗಳ ಬಳಕೆಯ ಕುರಿತಂತೆ ಫಲಾನುಭವಿಗಳಿಗೆ ಸಂಸ್ಥೆಯ ಕಾರ್ಯಕರ್ತರು ವಿವರಿಸಿ ಮಾಹಿತಿ ನೀಡುತ್ತಾರೆ.
ಈ ಯೋಜನೆಯನ್ವಯ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ಅವರ ನಿರ್ದೇಶನದಂತೆ, ಇದುವರೆಗೆ ಜಿಲ್ಲೆಯಲ್ಲಿ 779 ಫಲಾನುಭವಿಗಳಿಗೆ ಸಲಕರಣೆಗಳನ್ನು ಉಚಿತವಾಗಿ ವಿತರಿಸಲಾಗಿದ್ದು, ಈ ಕಾರ್ಯಕ್ರಮ ವಿಶೇಷ ಚೇತನರ ಅತ್ಮಸ್ಥೆರ್ಯವನ್ನು ಹೆಚ್ಚಿಸಿ ಅವರ ದೈನಂದಿನ ಬದುಕಿಗೆ ನೆರವಾಗಿದೆ ಎಂದು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹಾಗೂ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.