ಮೂಡುಬಿದಿರೆ : ಬೆದ್ರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಕೊಡಿ ಮರ (ಧ್ವಜಸ್ತಂಭ) ಹಾನಿಗೊಂಡು ಕುಸಿದುಬಿದ್ದ ಘಟನೆ ನಡೆದಿದೆ.
ಕಳೆದ ಕೆಲವು ದಿನಗಳಿಂದಲೇ ಪ್ರದೇಶದಲ್ಲಿ ನಿರಂತರವಾಗಿ ಭಾರೀ ಗಾಳಿ ಮತ್ತು ಮಳೆ ಮುಂದುವರಿಯುತ್ತಿದ್ದು, ಇದರ ಪರಿಣಾಮವಾಗಿ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವನ್ನು ಮುಂದಿನ ವರ್ಷ ನಡೆಸಲು ದಿನಾಂಕ ನಿಗದಿಯಾಗಿದ್ದ ಸಂದರ್ಭದಲ್ಲೇ ಈ ಘಟನೆ ಸಂಭವಿಸಿರುವುದು ಭಕ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ದೇವಸ್ಥಾನದ ಪ್ರಮುಖ ಧಾರ್ಮಿಕ ಚಿಹ್ನೆಯಾದ ಕೊಡಿಮರಕ್ಕೆ ಹಾನಿಯಾಗಿರುವುದು ಭಕ್ತ ಸಮುದಾಯದಲ್ಲಿ ಚಿಂತೆ ಮೂಡಿಸಿದೆ.
ಸ್ಥಳೀಯರು ಮತ್ತು ದೇವಸ್ಥಾನ ಆಡಳಿತ ಮಂಡಳಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ.

