ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಕೆನಡಾ ಘಟಕದ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

0
14

ಮಂಗಳೂರು : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಕೆನಡಾ ಘಟಕದ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅವರನ್ನು ನೇಮಕ ಮಾಡಿದೆ.

ಮೂಲತಃ ಕಾರ್ಕಳದವರಾದ ಸುದರ್ಶನ್ ಶೆಟ್ಟಿ ಅವರು ಮುಂಬೈನಲ್ಲಿ ಬೆಳೆದಿದ್ದು, ಪ್ರಸ್ತುತ ತಮ್ಮ ಕುಟುಂಬದೊಂದಿಗೆ ಕೆನಡಾದ ಟೊರೊಂಟೊದಲ್ಲಿ ನೆಲೆಸಿದ್ದಾರೆ.

ತುಳು ಭಾಷೆ, ಸಂಸ್ಕೃತಿ ಹಾಗೂ ತುಳುವರ ಪರಂಪರೆಯ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಸುದರ್ಶನ್ ಶೆಟ್ಟಿ ಅವರು ಜಾಗತಿಕ ಮಟ್ಟದಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪೂರ್ವ ಹಾಗೂ ಪಾಶ್ಚಾತ್ಯ ಸಂಸ್ಕೃತಿಗಳ ಉತ್ತಮ ಅಂಶಗಳನ್ನು ಅನುಭವಿಸುತ್ತಾ, ತಮ್ಮ ತುಳುವರ ಸಾಂಸ್ಕೃತಿಕ ಬೇರುಗಳು ಹಾಗೂ ಪ್ರಾಚೀನ ಪರಂಪರೆಯೊಂದಿಗೆ ಬದ್ಧತೆಯನ್ನು ಉಳಿಸಿಕೊಂಡು, ಆಧುನಿಕ ಜಗತ್ತಿನಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಚಾರ ಹಾಗೂ ಸೇವೆಗೆ ಶ್ರಮಿಸುತ್ತಿದ್ದಾರೆ.

ಅವರು ಆಲ್ ಅಮೆರಿಕಾ ತುಳು ಅಸೋಸಿಯೇಷನ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ತುಳುಕೂಟ ಕೆನಡಾದ ಸಂಸ್ಥಾಪಕ ಸದಸ್ಯರಾಗಿದ್ದಾರೆ. ಕೆನಡಾದಲ್ಲಿ ತುಳುವರ ಸಂಘಟನೆ ಹಾಗೂ ತುಳು ಭಾಷೆ, ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಪ್ರಚಾರದಲ್ಲಿ ಅವರು ಪ್ರಮುಖವಾಗಿ ತೊಡಗಿಸಿಕೊಂಡಿದ್ದಾರೆ.

ಕೆನಡಾದಲ್ಲಿ ನೆಲೆಸಿರುವ ತುಳುವರನ್ನು ಒಗ್ಗೂಡಿಸಿ, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಮತ್ತು ತುಳುವರ ಸಾಂಸ್ಕೃತಿಕ ಗುರುತನ್ನು ಬಲಪಡಿಸುವ ಉದ್ದೇಶದಿಂದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಕೆನಡಾ ಘಟಕದ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಅವರು ಈ ನೇಮಕವನ್ನು ಮಾಡಿದ್ದಾರೆ.

ಈ ನೇಮಕವನ್ನು ತುಳುವರ್ಲ್ಡ್ ಫೌಂಡೇಶನ್‌ನ ಗೌರವಾಧ್ಯಕ್ಷರಾದ ಶ್ರೀಹರಿನಾರಾಯಣದಾಸ ಅಸ್ರಣ್ಣ ಕಟೀಲ್, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ವಸಂತ ರೈ ಕುತ್ತೇತ್ತೂರು, ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಹಾಗೂ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ, ಕೇಂದ್ರೀಯ ಸಮಿತಿ ಅಧ್ಯಕ್ಷ ಡಾ. ಅವಿನ್ ಬಿ. ಆರ್. ಆಳ್ವ, ಕೇಂದ್ರೀಯ ಸಮಿತಿ ಕಾರ್ಯದರ್ಶಿ ಅರವಿಂದ ಬೆಲ್ಚಾಡ ಮತ್ತು ಕೇಂದ್ರೀಯ ಸಮಿತಿ ಸಂಚಾಲಕ ವಿಶ್ವನಾಥ ಆಚಾರ್ಯ ಅವರು ಹರ್ಷದಿಂದ ಸ್ವಾಗತಿಸಿ, ನೂತನ ಕೆನಡಾ ಘಟಕದ ಅಧ್ಯಕ್ಷರಾದ ಸುದರ್ಶನ್ ಶೆಟ್ಟಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಹಾರೈಕೆಗಳನ್ನು ಸಲ್ಲಿಸಿದ್ದಾರೆ.