
ಮಂಗಳೂರು : ಕುಲಾಲರ ಸಾಲ್ಯಾನ್ ಕುಟುಂಬದ ಅದಿಮೂಲ ಶ್ರೀ ನಾಗದೇವರು, ನಾಗಬ್ರಹ್ಮ, ರಕ್ತೇಶ್ವರಿ, ನಂದಿಕೋಣ, ಕ್ಷೇತ್ರಪಾಲ ಹಾಗೂ ಮಲರಾಯ ಸಾನಿಧ್ಯ ಪಿಲಿಕೂರು ನಾಗ ಬ್ರಹ್ಮ ಸನ್ನಿಧಿಯಲ್ಲಿ ನಾಗರ ಪಂಚಮಿ ಹಾಗೂ ಸಿಂಹ ಸಂಕ್ರಮಣ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಸೇವೆಗಳು ನಡೆಯಲಿದ್ದು, ನಾಗದೇವರ ಆರಾಧನೆಗೆ ವಿಶೇಷ ಮಹತ್ವ ನೀಡಲಾಗಿದೆ. ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ ಸಲ್ಲಿಸುವುದು ತುಳುನಾಡಿನ ಪ್ರಮುಖ ಧಾರ್ಮಿಕ ಸಂಪ್ರದಾಯಗಳಲ್ಲಿ ಒಂದಾಗಿದ್ದು, ಭಕ್ತರು ಶ್ರದ್ಧಾಭಕ್ತಿಯಿಂದ ಸೇವಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಕ್ಷೀರಾಭಿಷೇಕ ಹಾಗೂ ಸೀಯಾಳ ಅಭಿಷೇಕ ನೆರವೇರಲಿದೆ. ಮಧ್ಯಾಹ್ನ 12.30ಕ್ಕೆ ಕುಂಕುಮಾರ್ಚನೆ, ಪಂಚಾಮೃತಾಭಿಷೇಕ ಹಾಗೂ ತಂಬಿಲ ಸೇವೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಜರುಗಲಿದೆ. ಬಳಿಕ ಮಧ್ಯಾಹ್ನ 1.30ಕ್ಕೆ ಅನ್ನಪ್ರಸಾದ ವಿತರಣೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೇವಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
