ಉಡುಪಿ: ಮಣಿಪಾಲ ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಕಾರಿನಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಭಾರಿ ಜಾಲವನ್ನು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಉದ್ಯಾವರ ಗ್ರಾಮದ ಅಕ್ಬರ್ ಮಹಮ್ಮದ್ ಬ್ಯಾರಿ (44) ಹಾಗೂ ಬೆಂಗಳೂರಿನ ಎಂ. ಎಸ್ ಪಾಳ್ಯದ ಸೈಯದ್ ಸುಹೇಲ್ (26) ಬಂಧಿತ ಆರೋಪಿಗಳು.
ಘಟನೆಯ ವಿವರ
ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಬ್ರಿಡ್ಜ್ ಬಳಿ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು ಉಡುಪಿ, ಪೆರಂಪಳ್ಳಿ ಮತ್ತು ಮಣಿಪಾಲ ಸುತ್ತಮುತ್ತ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪೆರಂಪಳ್ಳಿ ರೈಲ್ವೇ ಬ್ರಿಡ್ಜ್ ಬಳಿ ಅಂಬಾಗಿಲು ಕಡೆಯಿಂದ ಬಂದ ಸಂಶಯಾಸ್ಪದ ಸ್ವಿಫ್ಟ್ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 10,00,000 ರೂ. ಮೌಲ್ಯದ 30 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃತ್ಯಕ್ಕೆ ಬಳಸಿದ್ದ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರು, 4 ಮೊಬೈಲ್ ಫೋನ್ಗಳು, 1 ಡೊಂಗಲ್ ಹಾಗೂ 9,500 ರೂ. ನಗದು ಹಣ ವಶಪಡಿಸಿಕೊಳ್ಳಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

