ಉಡುಪಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಡಿ.13ರಂದು ಬೆಳಗ್ಗೆ 10 ರಿಂದ ಸಾಯಂಕಾಲ 5 ರವರೆಗೆ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್.ಗಂಗಣ್ಣನವರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವರ್ಷದ ಕೊನೆಯ ಲೋಕ ಅದಲಾತ್ನಲ್ಲಿ ರಾಜಿಯಾಗಬಲ್ಲ 7564 ಸಿವಿಲ್ ಪ್ರಕರಣಗಳನ್ನು ಗುರುತಿಸಲಾಗಿದೆ. 2319 ಪ್ರಕರಣಗಳು ಇತ್ಯರ್ಥವಾಗುವ ನಿರೀಕ್ಷೆ ಇದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದರು.
ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನೂ ಸಹ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುತ್ತದೆ ಎಂದರು.
ಈ ವರ್ಷ ಮಾರ್ಚ್ನಲ್ಲಿ ನಡೆದ ಲೋಕ ಅದಾಲತ್ನಲ್ಲಿ 3399 ವಾಜ್ಯಗಳಲ್ಲಿ 2802 ಪ್ರಕರಣ, ಜುಲೈನಲ್ಲಿ ನಡೆದ ಲೋಕಅದಾಲತ್ನಲ್ಲಿ 4626 ವ್ಯಾಜ್ಯಗಳಲ್ಲಿ 3909, ಸೆಪ್ಟೆಂಬರ್ನಲ್ಲಿ ನಡೆದ ಲೋಕ ಅದಾಲತ್ನಲ್ಲಿ 4501 ವ್ಯಾಜ್ಯಗಳಲ್ಲಿ 3887 ಪ್ರಕರಣ ಇತ್ಯರ್ಥವಾಗಿದೆ ಎಂದು ಮಾಹಿತಿ ನೀಡಿದರು.
ಸುಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಉಪಸ್ಥಿತರಿದ್ದರು.

