NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಖಂಡನೆ – NSUI ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಪ್ರತಿಕ್ರಿಯೆ

0
10

NEET ಪರೀಕ್ಷೆ ರದ್ದು: 22.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಆಟ – ಸುಹಾನ್ ಆಳ್ವ ಆಕ್ರೋಶ

ಮೇ 3 ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ NSUI ಅಧ್ಯಕ್ಷ ಸುಹಾನ್ ಆಳ್ವ ತೀವ್ರವಾಗಿ ಖಂಡಿಸಿದ್ದಾರೆ.

ಈ ವರ್ಷ ಸುಮಾರು *22.5 ಲಕ್ಷ* ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸು ಹೊತ್ತು ಈ ಪರೀಕ್ಷೆಯನ್ನು ಬರೆದಿದ್ದರು. ಆದರೆ, ಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪದೋಷಗಳಿಂದಾಗಿ ಇಡೀ ಪರೀಕ್ಷಾ ವ್ಯವಸ್ಥೆಯೇ ಕುಸಿದುಬಿದ್ದಿದೆ. ಕೇಂದ್ರ ಸರ್ಕಾರದ ಈ ವೈಫಲ್ಯವು ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ ಎಂದು ಸುಹಾನ್ ಆಳ್ವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಪದೇ ಪದೇ ಇಂತಹ ಹಗರಣಗಳು ನಡೆಯುತ್ತಿರುವುದು ಕೇಂದ್ರ ಸರ್ಕಾರದ ಅದಕ್ಷತೆಯನ್ನು ತೋರಿಸುತ್ತದೆ. ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವ  *ಶ್ರೀ ಧರ್ಮೇಂದ್ರ ಪ್ರಧಾನ್* ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು,” ಎಂದು ಅವರು ಒತ್ತಾಯಿಸಿದ್ದಾರೆ.

ಒಂದೆಡೆ ವಿದ್ಯಾರ್ಥಿಗಳು ಹಗಲಿರುಳು ಕಷ್ಟಪಟ್ಟು ಓದುತ್ತಿದ್ದರೆ, ಮತ್ತೊಂದೆಡೆ ವ್ಯವಸ್ಥಿತವಾಗಿ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡುವ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಹಗರಣದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಇಲ್ಲದಿದ್ದರೆ ಜಿಲ್ಲಾದ್ಯಂತ  ಬೀದಿಗೆ ಇಳಿದು ಪ್ರತಿಭಟನೆ ನಡೆಸಲಿದ್ದೇವೆ.

ಒಂದು ಪತ್ರಿಕೆ ಸೋರಿಕೆ ತಡೆಯಲಾಗದವರು ಸರ್ಕಾರ ನಡೆಸಲು ಲಾಯಕ್ಕೇ?

ವಿದ್ಯಾರ್ಥಿಗಳ ಕನಸಿನ ಮೇಲೆ ಗದಾಪ್ರಹಾರ ಮಾಡಿರುವ ಕೇಂದ್ರ ಸರ್ಕಾರಕ್ಕೆ ಮುಂಬರುವ ದಿನಗಳಲ್ಲಿ ಯುವಜನತೆ ತಕ್ಕ ಪಾಠ ಕಲಿಸಲಿದ್ದಾರೆ.

-*ಸುಹಾನ್ ಆಳ್ವ, ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ NSUI ಸಮಿತಿ*

LEAVE A REPLY

Please enter your comment!
Please enter your name here