ಕುಂದಾಪುರ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಅತಿವೇಗವಾಗಿ ಬಂದ ಮಾರುತಿ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ದಾರುಣ ಘಟನೆ ಬೀಜಾಡಿ ಗ್ರಾಮದ ಅರಸರಬೆಟ್ಟು ಕ್ರಾಸ್ ಸಮೀಪ ಸಂಭವಿಸಿದೆ.
ಮೃತ ಮಹಿಳೆಯನ್ನು ಗೋಪಾಡಿ ಗ್ರಾಮದ ಚಂದ್ರಮತಿ (78) ಎಂದು ಗುರುತಿಸಲಾಗಿದೆ.
ಲಭ್ಯ ಮಾಹಿತಿ ಪ್ರಕಾರ, ರಾಘವೇಂದ್ರ ಎಂಬವರು ಚಾಲನೆ ಮಾಡುತ್ತಿದ್ದ ಮಾರುತಿ ಓಮ್ನಿ ಕಾರು ಕುಂಭಾಶಿ ಕಡೆಯಿಂದ ಕೋಟೇಶ್ವರ ರಥಬೀದಿ ಕಡೆಗೆ ಸಾಗುತ್ತಿತ್ತು. ಈ ವೇಳೆ ರಸ್ತೆ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಂದ್ರಮತಿ ಅವರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಚಂದ್ರಮತಿ ಅವರು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

