ದಕ್ಷಿಣ ಕನ್ನಡ : ಲಕ್ಕಿ ಸ್ಕೀಂ ದಂಧೆಯ ಕರಾಳ ಸತ್ಯವನ್ನು ಶೋಧಿಸಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮುಂದಾಗಿದೆ ಎಂದು ವರದಿಯಾಗಿದೆ. ಲಕ್ಕಿ ಸ್ಕೀಮ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಜಾಲವನ್ನು ಮಟ್ಟ ಹಾಕುವ ಉದ್ದೇಶದಿಂದ ಈ ಪ್ರಕರಣವನ್ನು ಪೊಲೀಸರು ವಿಶೇಷ ಪ್ರಕರಣವೆಂದು ಪರಿಗಣಿಸಿ ಕಾನೂನು ಪ್ರಕಾರ ಕ್ರಮಕ್ಕೆ ತನಿಖಾಧಿಕಾರಿಗಳು ಮುಂದಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕೂ ಅಧಿಕ ಲಕ್ಕಿ ಸ್ಕೀಂಗಳು ನಡೆಯುತ್ತಿದ್ದು, ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ, ಉಳ್ಳಾಲ, ಬಂಟ್ವಾಳ, ಪುತ್ತೂರು ಸೇರಿದಂತೆ ಜಿಲ್ಲಾದ್ಯಂತ ನಡೆಯುತ್ತಿರುವ ಸ್ಕೀಮ್ ವಹಿವಾಟು ಬಗ್ಗೆ ಜಿಲ್ಲಾ ಪೊಲೀಸರು ನಿಗಾವಹಿಸಿದ್ದಾರೆ.
ಈಗಾಗಲೇ ಕೃಷ್ಣಾಪುರ ಭಾಗದಲ್ಲಿ ವಂಚನೆ ಮಾಡಿರುವ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಸುಮಾರು 15 ಕೋಟಿ ರೂ. ವ್ಯವಹಾರ ನಡೆದಿರುವುದು ಪತ್ತೆ ಯಾಗಿದೆ. ಆರೋಪಿಗಳಿಗೆ ಈಗಾಗಲೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣವನ್ನು ಬಗೆದಷ್ಟು ಒಂದೊಂದೇ ವಿಚಾರಗಳು ಬಯಲಾಗುತ್ತಿದೆ. ಈ ದಂಧೆಯಲ್ಲಿ ಮತ್ತಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಲಕ್ಕಿ ಸ್ಕೀಮ್ ಯೋಜನೆಗಳಿದ್ದು ಎಲ್ಲ ವ್ಯವಹಾರಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದು ಮೋಸ ಎಂದು ಗೊತ್ತಾದ್ರೆ ಬಂಧಿಸುವ ಸಾಧ್ಯತೆ ಇದೆ ಇಂದು ಜಿಲ್ಲಾ ಮಾಧ್ಯಮಗಳಲ್ಲಿ ವರದಿಯಾಗಿದೆ.
ಮಂದಾರ ರಾಜೇಶ್ ಭಟ್

