ಕಾಸರಗೋಡು : ಕೊಪ್ಪಳ ಜಿಲ್ಲೆಯ ಭಾನಾಪುರದ ಖ್ಯಾತ ರಥ ಶಿಲ್ಪಿ, ರಥ ಶಿಲ್ಪ ರತ್ನ ಡಾ. ಯಲ್ಲಪ್ಪ ಬಡಿಗೇರ ಅವರು ಗಡಿನಾಡು ಕಾಸರಗೋಡಿನ ಕನ್ನಡ ಭವನ ಗ್ರಂಥಾಲಯ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ರಥ ಶಿಲ್ಪ ರತ್ನ – ಅಚೀವ್ಮೆಂಟ್ ಅವಾರ್ಡ್ 2026’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯನ್ನು ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ.
ಈ ಕುರಿತು ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ರಥ ಶಿಲ್ಪಕಲೆ ಕ್ಷೇತ್ರದಲ್ಲಿ ಡಾ. ಯಲ್ಲಪ್ಪ ಬಡಿಗೇರ ಅವರು ಸಲ್ಲಿಸಿರುವ ವಿಶಿಷ್ಟ ಸೇವೆ, ಅಪೂರ್ವ ಸಾಧನೆ ಹಾಗೂ ಕನ್ನಡ ಸಂಸ್ಕೃತಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಅಂತರ್ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

