
ಕಾರ್ಕಳ / ಮೂಡುಬಿದಿರೆ:ಕರ್ನಾಟಕ ಸರ್ಕಾರದ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ರಮಾನಾಥ್ ರೈ ಅವರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಚಿಲಿಂಬಿ ಸಮೀಪ ಈ ಘಟನೆ ನಡೆದಿದೆ.

ಅಪಘಾತದ ವಿವರ:
ಮಾಜಿ ಸಚಿವ ರಮಾನಾಥ್ ರೈ ಅವರು ಮೂಡುಬಿದಿರೆಯಿಂದ ಕಾರ್ಕಳದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಪ್ರಚಂಡ ಢಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಜಜ್ಜುಗುಜ್ಜಾಗಿದ್ದು, ರಮಾನಾಥ್ ರೈ ಅವರ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ.
ಸ್ಥಳೀಯರ ಸಮಯಪ್ರಜ್ಞೆ – ತಕ್ಷಣದ ರಕ್ಷಣೆ:
ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳಕ್ಕಾಗಮಿಸಿದ ಮೂಡುಬಿದಿರೆ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಜಗದೀಶ್, ಶಿಶಿರ್ ಹಾಗೂ ಸ್ಥಳೀಯರು ಹರಸಾಹಸ ಪಟ್ಟು ಕಾರಿನೊಳಗೆ ಸಿಲುಕಿಕೊಂಡಿದ್ದ ಮಾಜಿ ಸಚಿವ ರಮಾನಾಥ್ ರೈ ಮತ್ತು ಅವರ ಚಾಲಕನನ್ನು ಹೊರತೆಗೆದರು. ಬಳಿಕ ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು.
ಸದ್ಯ ರಮಾನಾಥ್ ರೈ ಹಾಗೂ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

