ರಾಯಚೂರು: ರಸ್ತೆ ಬದಿಯಲ್ಲಿ ನಿಂತವರ ಮೇಲೆ ಲಾರಿ ಪಲ್ಟಿಯಾಗಿ ಚೀಲಗಳು ಬಿದ್ದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿಂಧನೂರು ಪಿಡಬ್ಲ್ಯೂಡಿ ಸಮೀಪ ಡಾಲರ್ಸ್ ಕಾಲೋನಿ ಕ್ರಾಸ್ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.
ಜವಳಗೇರಾ ಉಪವಿಭಾಗದ ಕಿರಿಯ ಎಂಜಿನಿಯರ್ಗಳಾದ ಮಲ್ಲಿಕಾರ್ಜುನ (29), ಶಿವರಾಜು (28), ಮೆಹಬೂಬ (30) ಮೃತಪಟ್ಟವರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಜವಳಗೇರಾದಲ್ಲಿ ಕಚೇರಿ ಕೆಲಸ ಮುಗಿಸಿಕೊಂಡು ಸಿಂಧನೂರಿಗೆ ಬಂದು, ಪಿಡಬ್ಲ್ಯೂಡಿ ಕ್ಯಾಂಪ್ನ ಡಾಲರ್ಸ್ ಕಾಲೋನಿಗೆ ತೆರಳುವ ಮುಖ್ಯರಸ್ತೆಯ ಬಳಿ ಬೈಕ್ ನಿಲ್ಲಿಸಿ ಮೂವರು ಮಾತನಾಡುತ್ತಾ ನಿಂತಿದ್ದರು. ಇದೇ ವೇಳೆ, ರಾಯಚೂರಿನಿಂದ ಸಿಂಧನೂರು ಕಡೆ ಬರುತ್ತಿದ್ದ ಭತ್ತದ ಹೊಟ್ಟಿನ ಚೀಲಗಳನ್ನು ತುಂಬಿಕೊಂಡು ವೇಗವಾಗಿ ಬಂದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ರಸ್ತೆ ಬದಿ ನಿಂತವರ ಮೇಲೆಯೇ ಚೀಲಗಳು ಉರುಳಿ ಬಿದ್ದಿದ್ದು, ಅದರಡಿ ಸಿಲುಕಿ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
̲̲̲̲