ಉಡುಪಿ: ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಹಿತಕ್ಕಾಗಿ ರಾಜ್ಯ ಸರ್ಕಾರ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು, 250 ಕೋಟಿ ರೂ. ಅನುದಾನ ಒದಗಿಸಿದ್ದಾರೆ. ನಿಗಮದ ಮೂಲಕ ವಿವಿಧ ಸಾಲ ಯೋಜನೆಗಳು, ಸಹಾಯಧನ ಹಾಗೂ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ ಎಂದು ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ಹೊಸ ಸಾಲ, ಸಹಾಯಧನ ಹಾಗೂ ಕಲ್ಯಾಣ ಯೋಜನೆಗಳು ಮತ್ತು ಅಧಿಕೃತ ವೆಬ್ ಪೋರ್ಟಲ್ ಲೋಕಾರ್ಪಣೆಗೊಳಿಸಿದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆ ಮೂಲಕ ಸಿಇಟಿ ಮತ್ತು ನೀಟ್ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ. 50,000 ರಿಂದ 5 ಲಕ್ಷವರೆಗೆ ಸಾಲ ಯೋಜನೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ 20 ಲಕ್ಷವರೆಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಟ್ಯಾಕ್ಸಿ , ಸರಕು ಸಾಗಣೆ ವಾಹನ , ಆಟೋ ರಿಕ್ಷಾ ಖರೀದಿಗೆ ಸ್ವಾಲಂಬಿ ಸಾರಥಿ ಯೋಜನೆ. ಸಣ್ಣ ವ್ಯಾಪಾರ ಪ್ರಾರಂಭಿಸಲು ಅಥವಾ ವಿಸ್ತರಿಸಲು ಶ್ರಮಶಕ್ತಿ ಯೋಜನೆಯಡಿ 50,000 ಸಾಲ ನೀಡಲಾಗುತ್ತಿದೆ.
ವಿಧವೆಯರು, ವಿಚ್ಛೇದಿತ ಮಹಿಳೆಯರು ಹಾಗೂ ವಿವಾಹವಾಗದ ಮಹಿಳೆಯರ ಆರ್ಥಿಕ ಸಬಲಿಕರಣಕ್ಕಾಗಿ ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆಯಡಿ 50,000 ಸಾಲ ನೀಡಲಾಗುತ್ತಿದ್ದು ಇದಕ್ಕೆ 25,000 ರೂ. ಸಹಾಯಧನ ಲಭ್ಯವಿದೆ. ಗಂಗಾ ಕಲ್ಯಾಣ ಯೋಜನೆ ಮೂಲಕ ಬೋರ್ವೆಲ್ ತೋಡುವುದು, ಪಂಪ್ಸೆಟ್ ಅಳವಡಿಸುವುದು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಲು. 3 ಲಕ್ಷದಿಂದ 4.00 ಲಕ್ಷವರೆಗೆ ಸಹಾಯಧನ ನೀಡಲಾಗುತ್ತದೆ. ವ್ಯಾಪಾರ ಅಥವಾ ವಾಣಿಜ್ಯ ಚಟುವಟಿಕೆ ಪ್ರಾರಂಭಿಸಲು ನೇರ ವ್ಯವಹಾರ ಸಾಲ ಯೋಜನೆಯಡಿ 20 ಲಕ್ಷವರೆಗೆ ಸಾಲ ಒದಗಿಸಲಾಗುತ್ತದೆ. ಸ್ವ ಉದ್ಯೋಗ ಚಟುವಟಿಕೆ ಕೈಗೊಳ್ಳಲು ಮಹಿಳಾ ಸ್ವಸಹಾಯ ಸಂಘಗಳ ಸಹಾಯಧನ ಯೋಜನೆ , 2 ಲಕ್ಷ ರೂ. ವರೆಗೆ ಸಾಲ ನೀಡಲಾಗುತ್ತಿದ್ದು ಇದಕ್ಕೆ ಶೇ. 50 ಸಹಾಯಧನ ಲಭ್ಯವಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಸಮುದಾಯ ಆಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳು ನಿಗಮದ ವತಿಯಿಂದ ನಡೆಸಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ವೆರೋನಿಕಾ ಕರ್ನೆಲಿಯೋ, ರೋಶನಿ ಒಲಿವರ್, ವಿನೋದ್ ಕ್ರಾಸ್ಟೋ, ಸದಾನಂದ ಕಾಂಚನ್, ಶರ್ಫುದ್ದೀನ್, ಚಾರ್ಲ್ಸ್ ಅಂಬ್ಲರ್, ಗ್ಲಾಡ್ಸನ್ ಉಪಸ್ಥಿತರಿದ್ದರು.

