ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ಅಣಬೆ ಬೇಸಾಯ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಹೇಮಂತ್ ಕುಮಾರ್ ಅವರು ಮಾತನಾಡಿ, “ಸಣ್ಣ ಪ್ರಯತ್ನಗಳೇ ದೊಡ್ಡ ಸಾಧನೆಗಳಿಗೆ ಕಾರಣವಾಗುತ್ತವೆ. ಅಣಬೆ ಉತ್ಪನ್ನಗಳಿಗೆ ದೇಶ-ವಿದೇಶಗಳಲ್ಲಿ ಉತ್ತಮ ಮಾರುಕಟ್ಟೆ ಇದ್ದು, ಫೈವ್ಸ್ಟಾರ್ ಹೋಟೆಲ್ಗಳಲ್ಲಿ ಹೆಚ್ಚಿನ ಬೇಡಿಕೆ ಇದೆ” ಎಂದು ಹೇಳಿದರು. ತರಬೇತಿಯಲ್ಲಿ ಪಡೆದ ಜ್ಞಾನವನ್ನು ಉದ್ಯಮವಾಗಿ ರೂಪಿಸಿ ಸ್ವ ಉದ್ಯೋಗಕ್ಕೆ ಮುಂದಾಗುವಂತೆ ಶಿಬಿರಾರ್ಥಿಗಳಿಗೆ ಕರೆ ನೀಡಿದರು. ಬಳಿಕ ಪ್ರಮಾಣಪತ್ರಗಳನ್ನು ವಿತರಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ ಅವರು ಮಾತನಾಡಿ, ಬ್ಯಾಂಕ್ ಹಾಗೂ ಹಣಕಾಸು ಸಂಬಂಧಿತ ಸಮಸ್ಯೆಗಳಿಗಾಗಿ ಸಂಪರ್ಕಿಸುವಂತೆ ತಿಳಿಸಿ, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಉಪನಿರ್ದೇಶಕರಾದ ಬಿಳಗಿ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ಆಕಾಶ್, ಅಶ್ವಥ್ ಹಾಗೂ ಮಹೇಂದ್ರ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮವನ್ನು ಉಪನ್ಯಾಸಕಿ ಚೈತ್ರ ಕೆ ನಿರೂಪಿಸಿದರು. ಅಭಿಷೇಕ್ ಪ್ರಾರ್ಥಿಸಿದರು. ಹಿರಿಯ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ಸ್ವಾಗತಿಸಿ,ಶಾಂತಪ್ಪ ವಂದಿಸಿದರು.

