ಮಂಗಳೂರು: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಭರತ್ ಅಲಿಯಾಸ್ ಯಕ್ಷಿತ್, ದಿನೇಶ್ ಕುರ್ತಮೊಗೆರು ಬಂಧಿತ ಆರೋಪಿಗಳು. ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಐವನ್ ಡಿಸೋಜಾ ಹೇಳಿಕೆಯಿಂದ ಸಿಟ್ಟಾಗಿ ಕಲ್ಲೆಸೆದಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಬಂಟ್ವಾಳ ತಾಲೂಕಿನ ಬೋಳಂತೂರಿನ ರಾಘವ ಭಂಡಾರಿ ಎಂಬವರ ಪುತ್ರ ಭರತ್ ವಿರುದ್ಧ ಹಲ್ಲೆ ಆರೋಪದಡಿ ಈವರೆಗೆ 3 ಪ್ರಕರಣ ದಾಖಲಾಗಿವೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಆನಂದ ಪೂಜಾರಿ ಎಂಬವರ ಪುತ್ರನಾದ ದಿನೇಶ್ ಕನ್ಯಾನದಲ್ಲಿ ಫೈನಾನ್ಸ್ ವಸೂಲಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿರೋಧಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ರಾಜ್ಯಪಾಲ ಥಾಮರ್ಚಂದ್ ಗೆಹಲೋತ್ ವಿರುದ್ಧ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಆ.22 ರಂದು ರಾತ್ರಿ ಸುಮಾರು 11 ಗಂಟೆಗೆ ಹೆಲ್ಮೆಟ್ ಹಾಕಿಕೊಂಡು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆಯ ಮೇಲೆ ಕಲ್ಲು ತೂರಾಟ ಮಾಡಿ ಪರಾರಿಯಾಗಿದ್ದರು.
ಇದಾದ ನಂತರ 2 ನಿಮಿಷ ಬಿಟ್ಟು ಮತ್ತೆ ಬೈಕ್ನಲ್ಲಿ ಬಂದು ಕಲ್ಲು ತೂರಾಟ ಮಾಡಿದ್ದರು. ಇದರಿಂದ ಐವನ್ ಡಿಸೋಜಾ ಅವರ ಮನೆಯ ಕಿಟಕಿ ಗಾಜುಗಳು ಪುಡಿಯಾಗಿದ್ದವು. ಕಲ್ಲು ತೂರಾಟ ವೇಳೆ ಐವನ್ ಡಿಸೋಜಾ ಅವರ ಪತ್ನಿ ಕವಿತಾ ಡಿಸೋಜಾ ಮನೆಯಲ್ಲಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದ್ದರು.