ಯುವವಾಹಿನಿ (ರಿ.) ಮೂಡುಬಿದಿರೆ ಘಟಕ,ಆಳ್ವಾಸ್ ಪುನರ್ಜನ್ಮ, ಹಾಗೂ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಆರೋಗ್ಯ ಮಾಹಿತಿ ಕಾರ್ಯಾಗಾರ
ಮೂಡುಬಿದಿರೆ : ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ-ಮಾದಕ ವಸ್ತು ವ್ಯಸನ ಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಹಾಗೂ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶೋಭಾವನ, ಮಿಜಾರು ಇವರ ಸಹಯೋಗದಲ್ಲಿ “ವಿದ್ಯಾರ್ಥಿ ಮನೋಹಿತ” ಹಾಗೂ ಆರೋಗ್ಯ ಮಾಹಿತಿ ಕಾರ್ಯಾಗಾರವು ದಿನಾಂಕ 11/06/2026 ನೇ ಶನಿವಾರ ಜ್ಯೋತಿನಗರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಆಪೋಲೀನೋ ಮೋನಿಸ್ ಉದ್ಘಾಟಿಸಿ ಅತಿಥಿಗಳನ್ನು ಸ್ವಾಗತಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯದ ಜೊತೆಗೆ ಜೀವನ ಮೌಲ್ಯಗಳು, ಆರೋಗ್ಯ ಹಾಗೂ ವ್ಯಸನಮುಕ್ತ ಬದುಕಿನ ಅರಿವು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಯುವವಾಹಿನಿ ಆಯೋಜಿಸಿರುವ ಕಾರ್ಯಕ್ರಮ ಶ್ಲಾಘನೀಯ ಎಂದು ಹೇಳಿದರು.
ಆಳ್ವಾಸ್ ಪುನರ್ಜನ್ಮ ಕೇಂದ್ರದ ಆಪ್ತ ಸಮಾಲೋಚಕರಾದ ಲೋಹಿತ್ ಬಂಟ್ವಾಳ ಅವರು ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ದುಷ್ಪರಿಣಾಮಗಳ ಕುರಿತು ಉದಾಹರಣೆಗಳೊಂದಿಗೆ ಮಾಹಿತಿ ನೀಡಿದರು. ಮಾನಸಿಕ ಒತ್ತಡವನ್ನು ಸಕಾರಾತ್ಮಕವಾಗಿ ಎದುರಿಸುವುದು, ಉತ್ತಮ ಸ್ನೇಹ ಬಳಗವನ್ನು ಆಯ್ಕೆ ಮಾಡಿಕೊಳ್ಳುವುದು ಹಾಗೂ ವ್ಯಸನಗಳಿಂದ ದೂರವಿರುವುದು ಆರೋಗ್ಯಕರ ಜೀವನದ ಮೂಲಮಂತ್ರ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಸೋಸಿಯೇಟ್ ಪ್ರೊಫೆಸರ್ ಡಾ. ಮಹಲಾಸ ಕಾಂತಿ ಅವರು ಹೋಮಿಯೋಪಥಿ ಚಿಕಿತ್ಸಾ ಪದ್ಧತಿಯ ವೈಶಿಷ್ಟ್ಯ, “ಸಮಾನರು ಸಮಾನರನ್ನು ಗುಣಪಡಿಸುತ್ತಾರೆ” ಎಂಬ ಅದರ ಮೂಲತತ್ವ ಹಾಗೂ ಅಡ್ಡಪರಿಣಾಮಗಳಿಲ್ಲದ ಚಿಕಿತ್ಸೆಯ ಮಹತ್ವವನ್ನು ವಿವರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಕ್ರೀಡಾ ನಿರ್ದೇಶಕ ಶಂಕರ್ ಎ. ಕೋಟ್ಯಾನ್ ಅವರು, ಇಂದಿನ ಸಮಾಜದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವ್ಯಸನದ ಜಾಲ ವಿಸ್ತರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇಂತಹ ಜಾಗೃತಿ ಕಾರ್ಯಕ್ರಮಗಳು ಯುವಪೀಳಿಗೆಯನ್ನು ಸರಿದಾರಿಯಲ್ಲಿ ಮುನ್ನಡೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ಸ್ಪಷ್ಟವಾಗಿಟ್ಟುಕೊಂಡು ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ಮಾದರಿಯಾಗಬೇಕೆಂದು ಕರೆ ನೀಡಿದರು.
ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅವರು ಮಾತನಾಡಿ, ಯುವವಾಹಿನಿ ಮೂಡುಬಿದಿರೆ ಘಟಕವು ಶಿಕ್ಷಣ, ಆರೋಗ್ಯ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧ ಶಾಲೆಗಳಲ್ಲಿಯೂ ಇದೇ ಮಾದರಿಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆ ಹೊಂದಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಇಂದಿನ ಕಾರ್ಯಾಗಾರದಿಂದ ಪಡೆದ ಮಾಹಿತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಘಟಕದ ಸಮಾಜಸೇವಾ ನಿರ್ದೇಶಕ ಉಮೇಶ್ ಕೋಟ್ಯಾನ್, ಕೋಶಾಧಿಕಾರಿ ಜಯಶೀಲಾ ಎಸ್. ಪೂಜಾರಿ, ಸದಸ್ಯೆ ರತ್ನಾವತಿ, ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕುಮಾರಿ ಮನೀಷಾ ನಿರೂಪಿಸಿದ್ದು, ಗ್ರೇಸಿ ಡಿಸೋಜ ವಂದಿಸಿದರು.

