ಸಿಕ್ಕ ಅವಕಾಶಗಳನ್ನು ಶ್ರದ್ಧೆ ಪ್ರಾಮಾಣಿಕತೆಯಿಂದ ನಿಭಾಯಿಸಿದಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ : ಶಾಸಕ ಸುನಿಲ್ ಕುಮಾರ್

0
6

ಕಾರ್ಕಳ : ಸಿಕ್ಕ ಅವಕಾಶಗಳನ್ನು ಶ್ರದ್ಧೆ ಪ್ರಾಮಾಣಿಕತೆಯಿಂದ ನಿಭಾಯಿಸಿದಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಅವರು ಜು. 06 ರಂದು ವಿಕಾಸ ಸೇವಾ ಸಂಸ್ಥೆಯ ವತಿಯಿಂದ ಕಾರ್ಕಳದ ವಿಕಾಸ ಕಚೇರಿಯಲ್ಲಿ ಆಯೋಜಿಸಿದ್ದ “ವಿಕಾಸ ಉದ್ಯೋಗ ಸೇತು” ಉದ್ಯೋಗಾಕಾಂಕ್ಷಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾವು ಕಳೆದ 2015ರಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಸುಮಾರು 500ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಕಲ್ಪಿಸಲಾಗಿತ್ತು. ಅದೇ ಮಾದರಿಯಲ್ಲಿ ಈ ಬಾರಿಯೂ “ವಿಕಾಸ ಉದ್ಯೋಗ ಸೇತು” ಕಾರ್ಯಕ್ರಮದ ಮೂಲಕ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶ ಹೊಂದಿದ್ದೇವೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.

ಈಗಾಗಲೇ ಈ ಉದ್ಯೋಗ ಮೇಳಕ್ಕೆ ಸುಮಾರು 1,500ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, SSLC, PUC, Diploma, ಪದವಿ ಹಾಗೂ 300ಕ್ಕೂ ಹೆಚ್ಚು ಎಂಜಿನಿಯರಿಂಗ್ ಪದವೀಧರರು ಹೆಸರು ನೋಂದಾಯಿಸಿದ್ದಾರೆ. ಯುವಕರು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು. ತಾಳ್ಮೆ ಬೆಳೆಸಿಕೊಳ್ಳಬೇಕು. ಉದ್ಯೋಗ ಪಡೆಯಲು ಯಾವುದೇ ಶಿಫಾರಸು ಅಗತ್ಯವಿಲ್ಲ. ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಕ್ರಿಯಾಶೀಲತೆಗೆ ಅನುಗುಣವಾಗಿ ಕೆಲಸ ಸಿಗುತ್ತದೆ ಎಂದರು.

ವಿಶೇಷವಾಗಿ ಬೆಂಗಳೂರಿನಲ್ಲಿ ಉದ್ಯೋಗಕ್ಕೆ ಆಯ್ಕೆ ಆದ ವಿದ್ಯಾರ್ಥಿನಿಯರಿಗೆ ಕಂಪನಿಗಳಿಂದ ವಸತಿ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.
ಯುವಕರು ತಮ್ಮ ಅನುಭವ ಮತ್ತು ಕೌಶಲ್ಯವನ್ನು ರೂಪಿಸಿಕೊಂಡು, ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೇಕು. ಉದ್ಯೋಗ ದೊರೆತರೆ ಕುಟುಂಬದ ಆರ್ಥಿಕ ಸ್ಥಿರತೆಗೆ ಸಹಕಾರಿಯಾಗುತ್ತದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯುವಕ ಯುವತಿಯರು ಸರ್ಕಾರಿ ಉದ್ಯೋಗಗಳತ್ತವೂ ಹೆಚ್ಚಿನ ಆಸಕ್ತಿ ತೋರಿಸಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಅಳ್ವಾಸ್ ಎಜುಕೇಶನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ಮಾತನಾಡಿ, ಶಾಸಕರ ನೇತೃತ್ವದಲ್ಲಿ ಇಂತಹ ಬೃಹತ್ ಉದ್ಯೋಗ ಮೇಳ ಆಯೋಜಿಸಿರುವುದು ಶ್ಲಾಘನೀಯ ಹಾಗೂ ಸಾಹಸದ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ವಿದ್ಯಾರ್ಥಿಗಳು ಸದಾ ಸಕಾರಾತ್ಮಕ ಮನೋಭಾವ ಹೊಂದಿರಬೇಕು. ಯಾವುದೇ ಉದ್ಯೋಗಕ್ಕೆ ಪೂರ್ವಸಿದ್ಧತೆ ಅತ್ಯಗತ್ಯ. ಕೇವಲ ಪ್ರಮಾಣಪತ್ರಕ್ಕಾಗಿ ಶಿಕ್ಷಣ ಪಡೆಯದೆ, ಕೌಶಲ್ಯ ಮತ್ತು ತಾಳ್ಮೆಯನ್ನು ಬೆಳೆಸಿಕೊಳ್ಳುವುದು ಮುಖ್ಯ. ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ಸರ್ಕಾರಿ ಉದ್ಯೋಗಗಳಲ್ಲಿ ಹೊರ ಜಿಲ್ಲೆಗಳ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿರುವುದನ್ನು ಉಲ್ಲೇಖಿಸಿದ ಅವರು, ಕಾರ್ಕಳದ ಯುವಕರು ಕೂಡ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗಲು ವಿದ್ಯಾರ್ಥಿಗಳ ಸಹಕಾರವೂ ಅತ್ಯಗತ್ಯ. ಕಾರ್ಕಳದ ಸ್ವಚ್ಛತಾ ಬ್ರಿಗೇಡ್‌ನಂತಹ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಪ್ರೇರಣೆಯಾಗಿವೆ ಎಂದು ಹೇಳಿದರು.

ಕ್ರಿಯೇಟಿವ್ ಕಾಲೇಜಿನ ಸಹ-ಸಂಸ್ಥಾಪಕ ಅಶ್ವಥ್ ಎಸ್.ಎಲ್. ಮಾತನಾಡಿ, “ಸಹನೆ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವುದು ಯಶಸ್ಸಿನ ಮೂಲಮಂತ್ರವಾಗಿದೆ. ಯುವ ಸಮುದಾಯ ಉದ್ಯೋಗ ಪಡೆದು ತಮ್ಮ ಕುಟುಂಬಕ್ಕೆ ಬೆಳಕು ಚೆಲ್ಲುವ ಕಾರ್ಯ ಮಾಡಬೇಕು. ಸಿಗುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಅದರ ಪ್ರತಿಫಲವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ. ಯುವಕರು ಆಲಸ್ಯವನ್ನು ಬಿಟ್ಟು ಗುರಿಯತ್ತ ಮುನ್ನಡೆಯಬೇಕು. ಹೋರಾಟವನ್ನು ಜಯಿಸುವ ಸಾಮರ್ಥ್ಯ ಬೆಳೆಸಿಕೊಂಡಾಗ ಮಾತ್ರ ಯಶಸ್ಸಿನ ಕಿರೀಟ ಧರಿಸಲು ಸಾಧ್ಯ. ಉದ್ಯೋಗ ಪಡೆಯುವುದು ಮಾತ್ರ ಸಾಕಾಗುವುದಿಲ್ಲ; ಅದನ್ನು ನಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು,” ಎಂದರು.

ಫಾಕ್ಸ್‌ಕಾನ್ ಕಂಪನಿಯ ವ್ಯವಸ್ಥಾಪಕ ದಯಾನಂದ್ ಮಾತನಾಡಿ, ಉದ್ಯೋಗ ಸಂದರ್ಶನಕ್ಕೆ ಪೂರ್ವಸಿದ್ಧತೆ ಅತ್ಯಗತ್ಯವಾಗಿದೆ. ಅಭ್ಯರ್ಥಿಗಳು ಶ್ರಮವಹಿಸಿ, ಉತ್ತಮ ಕೌಶಲ್ಯ ಬೆಳೆಸಿಕೊಳ್ಳಬೇಕು. ದೊರೆಯುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡರೆ ಉತ್ತಮ ಉದ್ಯೋಗ ಗಳಿಸಲು ಸಾಧ್ಯ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕರುಣಾಕರ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಸುಮಾ ಪ್ರಾರ್ಥಿಸಿದರು. ರಾಜೇಶ್ ಆಚಾರ್ಯ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here