ಮಂಗಳೂರು : ಯೆನೆಪೊಯ ವರ್ಲ್ಡ್ ಸ್ಕೂಲ್, ಯೆನೆಪೊಯ ಸ್ಪೆಷಾಲಿಟಿ ಆಸ್ಪತ್ರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉಪ ಮಹಾಪ್ರಬಂಧಕರಾದ ಕೃಷ್ಣ ಮೋಹನ್ ಮುರ್ಚಾಲ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್ಬಿಐ ಪ್ರಾದೇಶಿಕ ವ್ಯವಸ್ಥಾಪಕರಾದ ವಿನಾಯಕ್ ಶೆಣೈ, ಯೆನೆಪೊಯ ಸ್ಕೂಲ್ ಮತ್ತು ಯೆನೆಪೊಯ ವರ್ಲ್ಡ್ ಸ್ಕೂಲ್ನ ಅಸೋಸಿಯೇಟ್ ಡೈರೆಕ್ಟರ್ ಆಂಥೋನಿ ಜೋಸೆಫ್, ಹಾಗೂ ಯೆನೆಪೊಯ ಸ್ಕೂಲ್ ಮತ್ತು ಪಿಯು ಕಾಲೇಜಿನ ಪ್ರಾಂಶುಪಾಲ ಉಜ್ವಲ್ ಮೆನೆಜಸ್ ಉಪಸ್ಥಿತರಿದ್ದರು.
ನಗರದ ವಿವಿಧ ಭಾಗಗಳಿಂದ ಆಗಮಿಸಿದ ರಕ್ತದಾನಿಗಳು ಶಿಬಿರದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಯೆನೆಪೊಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿ ಸೇರಿದಂತೆ ಹಲವರು ರಕ್ತದಾನ ಮಾಡಿ ಮಾನವೀಯ ಸೇವೆಯ ಮಹತ್ವವನ್ನು ಸಾರಿದರು.
ಸಮಾಜದಲ್ಲಿ ರಕ್ತದಾನದ ಅರಿವು ಮೂಡಿಸುವ ಹಾಗೂ ಅಗತ್ಯವಿರುವ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಶಿಬಿರ ಯಶಸ್ವಿಗೊಳಿಸಿದ ಎಲ್ಲಾ ರಕ್ತದಾನಿಗಳು ಹಾಗೂ ಸಹಭಾಗಿತ್ವ ಸಂಸ್ಥೆಗಳಿಗೆ ಆಯೋಜಕರು ಕೃತಜ್ಞತೆ ಸಲ್ಲಿಸಿದರು.
