ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ ಹೊರತು ಪಾಕಿಸ್ತಾನದ ಧ್ವಜದಿಂದ ಅಲ್ಲ : ಯಶ್ ಪಾಲ್ ಸುವರ್ಣ

0
32

ಭಗವಾಧ್ವಜ ಹಾರಿಸಿದ ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆ ಜಗಜ್ಜಾಹೀರಾಗಿದೆ.

ಉಡುಪಿಯ ನಾಡಹಬ್ಬ ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜೋಡುಕಟ್ಟೆಯ ಮುಂಭಾಗದ ವೇದಿಕೆಯಲ್ಲಿ ಅಷ್ಟಮಠದ ಯತಿಗಳ ದಿವ್ಯ ಉಪಸ್ಥಿತಿಯಲ್ಲಿ ಮಾನ್ಯ ಉಡುಪಿ ಜಿಲ್ಲಾಧಿಕಾರಿಗಳು ಭಗವಾಧ್ವಜವನ್ನು ಹಾರಿಸುವ ಮೂಲಕ ಸಾಂಪ್ರದಾಯಿಕ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಿದ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕು ಘಟಕ ಜಿಲ್ಲಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಆಗ್ರಹ ಮಾಡಿದೆ.

ಪ್ರತಿ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುವುದು ವಾಡಿಕೆ. ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮದಲ್ಲಿ ಭಾಗಿಯಾಗದ ಕಾರಣ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜಿಲ್ಲಾಧಿಕಾರಿಗಳು ಭಗವಾಧ್ವಜ ಹಾರಿಸಿದನ್ನು ಪಾಕಿಸ್ತಾನದ ಧ್ವಜವನ್ನು ಹಾರಿಸಿದಂತೆ ಮಹಾಪ್ರಮಾದ ಎಂಬಂತೆ ಬಿಂಬಿಸಿ ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೇವಲ ಭಗವಾಧ್ವಜವನ್ನು ಹಾರಿಸಿದರು ಎಂಬ ಏಕೈಕ ಕಾರಣಕ್ಕಾಗಿ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಮೂಲಕ ಹಿಂದೂಗಳ ಪವಿತ್ರ ಭಗವಾಧ್ವಜ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಧ್ವೇಷವಿದೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ.

ಒಂದು ವೇಳೆ ಜಿಲ್ಲಾ ಉಸ್ತುವಾರಿ ಸಚಿವರೇ ಭಗವಾಧ್ವಜವನ್ನು ಹಾರಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುತ್ತಿದ್ದರೆ ಕಾಂಗ್ರೆಸ್ ಪಕ್ಷ ಅವರ ರಾಜೀನಾಮೆಗೆ ಆಗ್ರಹಿಸುತ್ತಿತ್ತೆ??

ಹಿಂದೂತ್ವ, ರಾಷ್ಟ್ರೀಯತೆ, ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದು ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿರುವ ಕಾಂಗ್ರೆಸ್ ಪಕ್ಷದ ನಾಯಕರು ಹಿಂದೂಗಳ ಧಾರ್ಮಿಕ ಭಾವನೆ, ಭಗವಾಧ್ವಜಕ್ಕೆ ಅಪಮಾನ ಮಾಡಲು ಮುಂದಾಗಿರುವುದು ಅಕ್ಷಮ್ಯ.

ಮೊನ್ನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಜೀವಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ ಮಾಡಲು ಮೀನಾಮೇಷ ಎದುರಿಸುವ, ವಿಧಾನಸೌಧದ ಅಂಗಳದಲ್ಲಿ ಪಾಕಿಸ್ತಾನಕ್ಕೆ ಜೈ ಘೋಷಣೆ ಕೂಗಿದ ದೇಶ ವಿರೋಧಿ ಶಕ್ತಿಗಳ ಬಗ್ಗೆ ಮೌನ ವಹಿಸುವ ಕಾಂಗ್ರೆಸ್ ಪಕ್ಷ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುದಿಗಾಲಲ್ಲಿ ನಿಂತಿದೆ.

ಕೇವಲ 6 ತಿಂಗಳ ಹಿಂದೆ ಉಡುಪಿ ಜಿಲ್ಲಾಧಿಕಾರಿಯಾಗಿ ಲಕ್ಷಾಂತರ ಜನರು ಭಾಗವಹಿಸಿದ್ಧ ನಾಡಹಬ್ಬ ಪರ್ಯಾಯ ಮಹೋತ್ಸವವನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಿಕೊಟ್ಟ ದಕ್ಷ ಜಿಲ್ಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಪಕ್ಷ ಒತ್ತಡ ಹೇರಿ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಿದ ಬಗ್ಗೆ ಪತ್ರಿಕಾ ಹೇಳಿಕೆ ನೀಡುವಂತೆ ಮಾಡಿರುವುದು ದುರದೃಷ್ಟಕರ. ಜಿಲ್ಲಾಧಿಕಾರಿಗಳ ವಿರುದ್ಧ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಂಡರೆ ಉಡುಪಿಯ ಸಮಸ್ತ ಜನತೆ, ಹಿಂದೂ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸುವ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ

LEAVE A REPLY

Please enter your comment!
Please enter your name here