ಉಡುಪಿ: ಸೌಜನ್ಯ ಕೊಲೆ ನಡೆದು ಇಂದಿಗೆ 13 ವರ್ಷ ಕಳೆದರೂ ಆರೋಪಿಗಳನ್ನು ಪತ್ತೆ ಹಚ್ಚಲು ಸಾಧ್ಯವಾಗದಿರುವುದು ವ್ಯವಸ್ಥೆಯ ದುರಂತವಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಗುರುವಾರ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ರಾಜ್ಯದಾದ್ಯಂತ ನಡೆದ ಸೌಜನ್ಯ ದಿನ ಅಂಗವಾಗಿ ಹಳೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಸೌಜನ್ಯ ನ್ಯಾಯಕ್ಕಾಗಿ ಮೊಂಬತ್ತಿ ಹಿಡಿದು ಪ್ರತಿಭಟನೆಯಲ್ಲಿ ಮಾತನಾಡಿದರು.
ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಅಸಹಜ ಸಾವುಗಳಿಗೂ ನ್ಯಾಯ ಸಿಕ್ಕಿಲ್ಲ. ಆರೋಪಿಗಳ ಪತ್ತೆ ಆಗಿಲ್ಲ. ಅನ್ಯಾಯ ವಿರುದ್ಧ ನ್ಯಾಯಕ್ಕಾಗಿ ಜನಾಗ್ರಹ ಮೂಲಕ ಹೋರಾಟ ತೀವ್ರಗೊಳಿಸಬೇಕು ಎಂದು ಅವರು ಹೇಳಿದರು. ರಾಜ್ಯ ಸರ್ಕಾರ ಎಸ್ಐಟಿ ತನಿಖೆಯನ್ನು ನಡೆಸುತ್ತಿರುವುದನ್ನು ಅಭಿನಂದನೀಯ. ಆದರೆ ಕೆಲವು ಸ್ಥಾಪಿತ ಹಿತಾಸಕ್ತಿಗಳು ಎಸ್ಐಟಿ ದುರ್ಬಲಗೊಳಿಸುವ ಕಾರ್ಯ ಮಾಡುತ್ತಿದ್ದು, ಧರ್ಮಸ್ಥಳದಲ್ಲಿ ನಡೆದ ಎಲ್ಲಾ ಪ್ರಕರಣಗಳನ್ನು ಎಸ್ಐಟಿಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು. ಸಿಐಟಿಯು ಜಿಲ್ಲಾ ಅಧ್ಯಕ್ಷ ಶಶಿಧರ ಗೊಲ್ಲ ಮಾತನಾಡಿದರು. ಕವಿರಾಜ್ ಎಸ್. ಕಾಂಚನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನವಾದಿ ಮಹಿಳಾ ಸಂಘಟನೆಯ ಸರೋಜ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಸುಭಾಶ್ಚಂದ್ರ ನಾಯಕ್, ದಯಾನಂದ ಕೋಟ್ಯಾನ್, ಸಯ್ಯದ್, ರಮೇಶ್ ಉಡುಪಿ, ರಾಮ ಕಾರ್ಕಡ, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು, ಬೀಡಿ ಸಂಘಟನೆಯ ಉಮೇಶ್ ಕುಂದರ್, ನಳಿನಿ ಉಪಸ್ಥಿತರಿದ್ದರು.