ಗದಗ : ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಅವರ ಮದುವೆ ತಯಾರಿ ಸಂಬಂಧ ಏಪ್ರಿಲ್ 17 ರಂದು ಸಂಬಂಧಿಕರಾದ ಪರಶುರಾಮ, ಪತ್ನಿ ಲಕ್ಷ್ಮೀ, ಪುತ್ರಿ ಆಕಾಂಕ್ಷಾ ಕೊಪ್ಪಳದಿಂದ ಗದಗ ನಗರಕ್ಕೆ ಆಗಮಿಸಿದ್ದಾರೆ. ಗುರುವಾರ (ಏ.18) ರಂದು ರಾತ್ರಿ ಪರಶುರಾಮ ಪತ್ನಿ ಲಕ್ಷ್ಮೀಯವರ ಹುಟ್ಟಿದ ಹಬ್ಬವನ್ನು ಕುಟುಂಬಸ್ಥರು ಆಚರಿಸಿದ್ದಾರೆ. ಬಳಿಕ ಪರಶುರಾಮ ಕುಟುಂಬ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿತ್ತು.
ತಡರಾತ್ರಿ ಪರಶುರಾಮ ಕುಟುಂಬ ಮಲಗಿದ್ದ ಕೋಣೆ ಗಾಜಿನ ಕಿಟಕಿಯನ್ನು ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಿಟಿಕಿ ಒಡೆದ ಮತ್ತು ಕಿರಿಚಾಟದ ಸದ್ದು ಕೇಳಿ ಏನಾಯಿತೆಂದು ಕೆಳಗಿನ ಕೋಣೆಯಲ್ಲಿ ಮಲಗಿದ್ದ ಕಾರ್ತಿಕ್ ಬಾಕಳೆ ನೋಡಲು ಹೋಗಿದ್ದಾರೆ. ಆಗ ದುಷ್ಕರ್ಮಿಗಳು ಕಾರ್ತಿಕ್ನನ್ನೂ ಕೊಲೆ ಮಾಡಿದ್ದಾರೆ. ಬಳಿಕ ದುಷ್ಕರ್ಮಿಗಳು ಮನೆಯ ಮಾಲಿಕ ಪ್ರಕಾಶ್ ಬಾಕಳೆ ಮತ್ತು ಪತ್ನಿ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರು ಮಲಗಿದ್ದ ಕೋಣೆಯ ಬಾಗಲಿ ತಟ್ಟಿದ್ದಾರೆ.
ಆದರೆ ದಂಪತಿ ಬಾಗಿಲು ತೆಗೆಯದೆ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಹಿಂಬಾಗಿಲಿನಿಂದ ಪರಾರಿಯಾಗಿದ್ದಾರೆ. ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳನ್ನು ದುಷ್ಕರ್ಮಿಗಳು ಚರಂಡಿಯಲ್ಲಿ ಬಿಸಾಕಿದ್ದಾರೆ. ಸ್ಥಳಕ್ಕೆ ಶ್ವಾನದಳ, ವಿಧಿವಿಜ್ಞಾನ ಪ್ರಯೋಗಾಲಯ ತಂಡ, ಎಸ್ಪಿ ಬಿಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂಬಿ ಸಂಕದ, ಡಿವೈಎಸ್ಪಿ, ಸಿಪಿಐ ಭೇಟಿ ನೀಡಿದ್ದಾರೆ.
ಪ್ರಕಾಶ್ ಬಾಕಳೆ ಮನೆಗೆ ಹೆಚ್ಕೆ ಪಾಟೀಲ್ ಭೇಟಿ
ಕೊಲೆ ನಡೆದ ಪ್ರಕಾಶ್ ಬಾಕಳೆ ಮನೆಗೆ ಸಚಿವ ಹೆಚ್.ಕೆ.ಪಾಟೀಲ್ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ ಹೇಳಿದರು. ಈ ವೇಳೆ ಕುಟುಂಬಸ್ಥರು ಕೊಲೆಗಾರರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಆರೋಪಿಗಳನ್ನು ಕೂಡಲೆ ಬಂಧಿಸಲಾಗುವುದು ಎಂದು ಸಚಿವ ಹೆಚ್.ಕೆ ಪಾಟೀಲ್ ಕುಟುಂಬಸ್ಥರಿಗೆ ವಿಶ್ವಾಸ ನೀಡಿದರು.