ಶಿವಮೊಗ್ಗ : ಸ್ಕೂಟರ್ ಮತ್ತು ನೀರಿನ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರ್ಕಳ ಮೂಲದ ವಿಧ್ಯಾರ್ಥಿನಿ ಸಾವನಪ್ಪಿದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಮೃತರನ್ನು ಮೆಡಿಕಲ್ ಪಿಜಿ ವಿಧ್ಯಾರ್ಥಿನಿ ಕಾರ್ಕಳ ಮೂಲದ ಬೋಳ ಗ್ರಾಮದ ಸತೀಶ್- ಸುನೀತಾ ದಂಪತಿ ಪುತ್ರಿ ಲಾವಣ್ಯ(25) ಎಂದು ಗುರುತಿಸಲಾಗಿದೆ.
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ವಾಟರ್ ಟ್ಯಾಂಕರ್ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಅಡಿಯಲ್ಲಿ ಸಿಲುಕಿದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ಲಾರಿ ನೀರು ಪೂರೈಕೆ ಮಾಡುತ್ತಿತ್ತು. ಆಸ್ಪತ್ರೆ ಆವರಣದಲ್ಲಿ ವಿದ್ಯಾರ್ಥಿನಿಯರಿಬ್ಬರು ತೆರಳುತ್ತಿದ್ದ ಈ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿನಿ ಮೇಲೆ ಟ್ಯಾಂಕರ್ ಹರಿದಿದ್ದು, ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ವಿದ್ಯಾರ್ಥಿನಿ ಓವೇರಿಯಾ ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

