ತ್ರಿಪುರ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತ್ರಿಪುರದಲ್ಲಿ ಹಲವು ಅವಘಡಗಳು ಸಂಭವಿಸಿವೆ. ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಮಡಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಮೂವತ್ತು ವರ್ಷಗಳಲ್ಲೇ ಅತ್ಯಧಿಕ ಮಳೆ ಸುರಿದಿದ್ದು, ದಕ್ಷಿಣ ತ್ರಿಪುರ ಜಿಲ್ಲೆಯ ಸಂತಿರ್ಬಜಾರ್ನಲ್ಲಿ ಬುಧವಾರ ತಡರಾತ್ರಿ ಎಡೆಬಿಡದೆ ಮಳೆ ಸುರಿದಿದೆ. ಇದರಿಂದಾಗಿ ಅಲ್ಲಲ್ಲಿ ಭೂ ಕುಸಿತಗಳಾಗಿವೆ. ಸಂತಿರ್ಬಜಾರ್ನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಎರಡು ಕುಟುಂಬಗಳ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟ ಪ್ರತಿ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ಘೋಷಿಸಲಾಗಿದೆ. ರಾಜ್ಯದ ಎಂಟು ಜಿಲ್ಲೆಗಳ 450 ಶಿಬಿರಗಳಲ್ಲಿ 65,000 ಜನರು ಆಶ್ರಯ ಪಡೆದಿದ್ದಾರೆ. ಭೀಕರ ಪ್ರವಾಹಕ್ಕೆ ಇಡೀ ರಾಜ್ಯದ 17 ಲಕ್ಷ ಜನರು ಸಂತ್ರಸ್ತರಾಗಿದ್ದಾರೆ.
