ಕೇಪು ಅಜಿಲರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ ಪ್ರಧಾನ

0
5

ಸುಳ್ಯ : ಹಿರಿಯ ಕಲಾವಿದ, ದೈವದ ಪಾತ್ರಿ ಮತ್ತು ತುಳು ಯಕ್ಷಗಾನ ಪ್ರಸಂಗ ಕರ್ತೃ ಎ . ಕೇಪು ಅಜಿಲ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಸುಳ್ಯದ ಕೊಡಿಯಾಲ ಬೈಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಘಟಕದ ಸಹಯೋಗದಲ್ಲಿ ಚಾವಡಿ ತಮ್ಮನ ಗೌರವಾರ್ಪಣೆ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ತುಳು ನಾಡು ನುಡಿಗೆ ಸೇವೆ ಸಲ್ಲಿಸಿದ ಹಿರಿಯ ಸಾಧಕರನ್ನು ಅವರ ಹುಟ್ಟೂರಿನಲ್ಲಿಯೇ ಗೌರವಿಸುವ ಕಾರ್ಯವನ್ನು ಅಕಾಡೆಮಿ ನಡೆಸುತ್ತಿದೆ.

ಕೇಪು ಅಜಿಲರ 60 ವರ್ಷಗಳ ಸುದೀರ್ಘ ಸೇವೆಯು ತಳುನಾಡಿನ ಜಾನಪದ ಪರಂಪರೆಗೆ ಸಂದ ಅನನ್ಯ ಕೊಡುಗೆಯಾಗಿರುತ್ತದೆ ಎಂದು ಬಣ್ಣಿಸಿದರು.
ಸುಳ್ಯ ತಾಲೂಕು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ.ಬಿ.ಸುಧಾಕರ ರೈ ಅಭಿನಂದನಾ ಮಾತುಗಳನ್ನಾಡಿ, ಕೇಪು ಅಜಿಲರು ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠಾವಂತ ಕಲಾವಿದ ಎಂದು ಹೇಳಿದರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಅಧ್ಯಕ್ಷ ವೆಂಕಟ್ ವಳಲಂಬೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.

ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್ ಎನ್ .ಪಿ, ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಶಿವಾನಂದ ಜಿ., ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಸಹನಾ ಸನ್ಮಾನ ಪತ್ರ ವಾಚಿಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಈಶ್ವರ ವಾರಣಾಶಿ ಸ್ವಾಗತಿಸಿ, ವಿದ್ಯಾರ್ಥಿನಿ ಹಂಸಿನಿ ವಂದಿಸಿದರು. ಕಾಲೇಜಿನ ತುಳು ಸಂಘದ ಅಧ್ಯಕ್ಷೆ ಗುಣಶ್ರೀ ಕಾರ್ಯಕ್ರಮ ನಿರೂಪಿಸಿದರು.