ಉಡುಪಿ : ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾಋ ಗೋ ಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ದುರ್ಬಲಗೊಳಿಸಲು ಮುಂದಾಗಿದ್ದು, ಈ ಮೂಲಕ ಪೊಲೀಸರ ಆತ್ಮಸ್ಥೆರ್ಯ ಕುಗ್ಗಿಸುವ ಕೆಲಸ ಮಾಡಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ವಿಎಚ್ಪಿ ಕರ್ನಾಟಕ ದಕ್ಷಿಣ ಪ್ರಾಂತ್ಯದ ಗೋ ರಕ್ಷಾ ಪ್ರಮುಖ್ ಸುನೀಲ್ ಕೆ.ಆರ್. ಎಚ್ಚರಿಸಿದ್ದಾರೆ.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ತಿದ್ದುಪಡಿ ವಿಧೇಯಕ ಜಾರಿ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸೋಮವಾರ ಜಟ್ಕಾ ಬಸ್ ನಿಲ್ದಾಣದ ಬಳಿ ನಡೆದ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದರು.
ಕರಾವಳಿ ಕರ್ನಾಟಕ ಸಹಿತ ರಾಜ್ಯದ ಎಲ್ಲ ಭಾಗಗಳಲ್ಲಿ ಗೋವುಗಳನ್ನು ಕದ್ದು ಸಾಗಾಟ ಮಾಡುವುದು ಮತ್ತು ವಧೆ ಮಾಡಿ ಅಕ್ರಮವಾಗಿ ಮಾಂಸ ಮಾರಾಟ ಮಾಡುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಕೆಲಸ ನಿರಂತರ ನಡೆಯುತ್ತಿದೆ. ಗೋವುಗಳನ್ನು ಕದ್ದು ಸಾಗಾಟ ಮಾಡುವವರನ್ನು ಬಂಧಿಸಿ, ವಾಹನ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಬಲ ಕಾನೂನನ್ನು ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿತ್ತು. ಆದರೆ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಮುಸ್ಲಿಮರನ್ನು ಓಲೈಸಲು ಮುಂದಾಗಿದ್ದಾರೆ ಆರೋಪಿಸಿದರು.
ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಪ್ರಮುಖರಾದ ಸುಧೀರ್ ನಿಟ್ಟೆ, ಮಹೇಶ್ ಬೈಲೂರು, ರೇಶ್ಮಾ ಉದಯ್ ಶೆಟ್ಟಿ, ನಳಿನಿ ಪ್ರದಿಪ್ರಾವ್, ಶ್ರೀಕಾಂತ್ ನಾಯಕ್, ವಿಖ್ಯಾತ್ ಭಟ್ ಮೊದಲಾದವರಿದ್ದರು.

