ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ರಾಜ್ಯವನ್ನು ಸಾಲದ ಶೂಲಕ್ಕೇರಿಸಿರುವ ಜೊತೆಗೆ ಈಗಾಗಲೇ ವಿಧಿಸಿರುವ ದುಬಾರಿ ತೆರಿಗೆಗಳ ಮೂಲಕ ಗಾಯದ ಮೇಲೆ ಬರೆ ಎಳೆದ ಅಭಿವೃದ್ಧಿ ಶೂನ್ಯ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಅಧಿಕಾರಕ್ಕಾಗಿ ಜಾರಿಗೊಳಿಸಿದ್ದ ಗ್ಯಾರಂಟಿಗಳ ನಿರ್ವಹಣೆಗೆ ಪರದಾಡುತ್ತಿರುವ ರಾಜ್ಯ ಸರಕಾರ ಯುವ ನಿಧಿ ಗ್ಯಾರಂಟಿಗೆ ಎಳ್ಳು ನೀರು ಬಿಟ್ಟಂತಾಗಿದೆ. ಮೂಲ ಸೌಕರ್ಯ ಅಭಿವೃದ್ಧಿಗೆ ಯಾವುದೇ ದೃಢ ಯೋಜನೆಗಳನ್ನು ರೂಪಿಸಿಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉಚಿತ ಯೋಜನೆಗಳಲ್ಲಿ ವಿದ್ಯಾರ್ಥಿಗಳ ನಡುವೆ ತಾರತಮ್ಯ ತೋರಿದ ಜೊತೆಗೆ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ದಿವ್ಯ ನಿರ್ಲಕ್ಷ್ಯ ಧೋರಣೆ ತಳೆದ ರಾಜಕೀಯ ಪ್ರೇರಿತ ಬಜೆಟ್ ಇದಾಗಿದೆ.
ರಸ್ತೆ ಗುಂಡಿ ಮುಚ್ಚಲೂ ಹಣವಿಲ್ಲದ ರಾಜ್ಯ ಸರಕಾರ ಪ್ರಸಕ್ತ ಸಾಲಿನಲ್ಲಿ 1.32 ಲಕ್ಷ ಕೋಟಿ ರೂಪಾಯಿ ಸಾಲ ಮಾಡುವ ಮೂಲಕ ಆರ್ಥಿಕ ಶಿಸ್ತನ್ನು ಉಲ್ಲಂಘಿಸಿದಂತಿದೆ. ರಾಜ್ಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ನಡೆಯುತ್ತಿರುವ ಪ್ರತಿಭಟನೆಗಳು ಅರಣ್ಯರೋಧನವಾಗಿದೆ. ಒಟ್ಟಾರೆಯಾಗಿ ರಾಜ್ಯದ ಹಿತವನ್ನು ಬಲಿಗೊಟ್ಟು ಯಾವುದೇ ಹೊಸತನವಿಲ್ಲದ, ಕೇವಲ ಸಾಲದ ಪ್ರಮಾಣ ಹೆಚ್ಚಿಸುವಲ್ಲಿ ದಾಖಲೆಗೈದ ನಿಷ್ಪ್ರಯೋಜಕ ಬಜೆಟ್ ಇದಾಗಿದೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

